ಬೆಂಗಳೂರು: ಪ್ರತಿಯೊಂದನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಬೇಕೆಂಬ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಐಜಿ ಡಿ. ರೂಪಾ ವರ್ಗಾವಣೆ ಮಾಡಿರುವ ನಿರ್ಧಾರದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಇದೊಂದು ಆಡಳಿತಾತ್ಮಕ ಪ್ರಕ್ರಿಯೆಯಾಗಿದ್ದು, ಪ್ರತಿಯೊಂದನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯ ಕಾನೂನು ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ವರ್ಗಾವಣೆ ಕುರಿತು ನನಗೆ ಮಾಹಿತಿಯಿಲ್ಲ. ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮವನ್ನು ಎದುರಿಸಲೇಬೇಕು ಎಂದು ಹೇಳಿದ್ದಾರೆ.
ಅಧಿಕಾರಗಳನ್ನು ವರ್ಗಾವಣೆ ಮಾಡಲಾಗಿದೆಯೇ ಅಥವಾ ಇಲ್ಲವೋ ಎಂಬುದರ ಬಗ್ಗೆ ನನಗೆ ಮಾಹಿತಿಯಿಲ್ಲ. ಈಗಾಗಲೇ ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ತನಿಖೆ ಸಂಪೂರ್ಣಗೊಳ್ಳಲಿ. ವರದಿ ಬಂದ ಬಳಿಕ ಡಿಐಜಿ ಅಥವಾ ಡಿಜಿಪಿಯೇ ಆಗಲೀ, ಯಾರೇ ಮಿತಿ ಮೀರಿದ್ದರೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದ ಇಬ್ಬರು ಹಿರಿಯ ಅಧಿಕಾರಿಗಳು ಇತ್ತೀಚೆಗೆ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದರು. ಇದರಂತೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಂಡಿರುವ ರಾಜ್ಯ ಸರ್ಕಾರ ರೂಪಾ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ಡಿಐಜಿಯಾಗಿ ವರ್ಗಾವಣೆ ಮಾಡಿದೆ. ಸತ್ಯನಾರಾಯಣ ರಾವ್ ಅವರಿಗೆ ಯಾವುದೇ ಸ್ಥಾನವನ್ನು ನೀಡದೆ ಕಾರಾಗೃಹ ಡಿಜಿ ಸ್ಥಾನದಿಂದ ತೆರವುಗೊಳಿಸಿದೆ. ಸತ್ಯನಾರಾಯಣ ಅವರ ನಿವೃತ್ತಿಗೆ ಇನ್ನು ಕೆಲವೇ ದಿನಗಳು ಬಾಕಿಯಿರುವಾಗಲೇ ತಾತ್ಕಾಲಿಕವಾಗಿ ಸೇವೆಯಿಂದ ಮುಕ್ತಿಗೊಳಿಸಲಾಗಿದೆ. ಮುಖ್ಯಮಂತ್ರಿ ಸ್ಥಾನದೊಂದಿಗೆ ಗೃಹ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos