ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು 150 ಕೋಟಿ ರುಪಾಯಿ ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ ಐಟಿ)ಕ್ಕೆ ಸಾಕಷ್ಟು ದಾಖಲಾತಿ ಹಾಗೂ ಪೆನ್ ಡ್ರೈವ್ ಅನ್ನು ನೀಡಿರುವುದಾಗಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮಂಗಳವಾರ ಹೇಳಿದ್ದಾರೆ.
ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಇಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಎಸ್ ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ, ನಾನು ಕಳೆದ 10 ವರ್ಷಗಳಿಂದ ಸಾಕ್ಷ್ಯಗಳನ್ನು ಕಾಪಾಡಿಕೊಂಡು ಬಂದಿದ್ದೇನೆ. ನನ್ನ ಆರೋಪಕ್ಕೆ ಪೂರಕವಾದ ಎಲ್ಲಾ ರೀತಿಯ ದಾಖಲೆ, ವಿಡಿಯೋ ಸೀಡಿ ಹಾಗೂ ಬ್ಯಾಂಕ್ ಸ್ಟೇಟ್ ಮೆಂಟ್ ಅನ್ನು ಎಸ್ ಐಟಿ ಅಧಿಕಾರಿಗಳಿಗೆ ನೀಡಿದ್ದೇನೆ. ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೀಗಾಗಿ ತನಿಖೆಯ ಕುರಿತು ಹೆಚ್ಚಿನ ಮಾಹಿತಿ ನೀಡುವ ಅಗತ್ಯವಿಲ್ಲ ಎಂದರು.
ಕುಮಾರಸ್ವಾಮಿ ಅವರು 150 ಕೋಟಿ ರುಪಾಯಿ ಕಿಕ್ ಬ್ಯಾಕ್ ಪಡೆದಿರುವ ಆರೋಪದ ಬಗ್ಗೆ ಜೂನ್ 13ರಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಜನಾರ್ದನ ರೆಡ್ಡಿಗೆ ನೋಟಿಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರೆಡ್ಡಿ ಇಂದು ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.
2007ರಲ್ಲಿ ಕುಮಾರಸ್ವಾಮಿ ಅವರು ಜಂತಕಲ್ ಮೈನಿಂಗ್ ಕಂಪೆನಿಯಿಂದ 150 ಕೋಟಿ ಲಂಚ ಪಡೆದಿದ್ದಾರೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರು. ಇದು ರಾಜಕೀಯ ವಲಯದಲ್ಲಿ ಭಾರಿ ಸದ್ದು ಮಾಡಿತ್ತು. ಹಲವು ಏರಿಳಿತಗಳನ್ನು ಕಂಡ ಈ ಪ್ರಕರಣದ ಹಿಂದಿನ ವಿಚಾರಣೆಯಲ್ಲಿ ತಮಗೆ ಸಾಕ್ಷ್ಯಗಳನ್ನು ಒದಗಿಸಲು ಮೂರು ವಾರಗಳ ಕಾಲಾವಕಾಶ ಬೇಕು ಎಂದು ಜನಾರ್ದನ ರೆಡ್ಡಿ ಎಸ್ಐಟಿಗೆ ಕೇಳಿಕೊಂಡಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos