ಬೆಂಗಳೂರು: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕ- 2017 ಅನ್ನು ಗುರುವಾರ ವಿಧಾನಸಭೆಯಲ್ಲಿ ಅವಿರೋಧವಾಗಿ ಅಂಗೀಕಾರ ನೀಡಲಾಯಿತು.
ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಿ, ಮಸೂದೆ ಕುರಿತು ವಿವರಿಸಿದರು. ಸುದೀರ್ಘ ಚರ್ಚೆಯ ನಂತರ ಜಿಎಸ್ ಟಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಯಿತು.
ಈ ವೇಳೆ ಮಾತನಾಡಿದ ಸಿಎಂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿಎಸ್ಟಿ ಕಾಯ್ದೆಗೆ ಪೂರಕವಾಗಿ ವಿಧೇಯಕವನ್ನು ಮಂಡಿಸಲಾಗಿದೆ. ಇಲ್ಲಿ ನಡೆಯುವ ಚರ್ಚೆಗಳಿಂದ ಬದಲಾವಣೆಗಳು ಅಸಾಧ್ಯ. ಆದರೂ, ಇಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಜಿಎಸ್ಟಿ ಮಂಡಳಿ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಈ ಕುರಿತು ಮಾತನಾಡಿದ ಬಿಜೆಪಿಯ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ಕೇಂದ್ರ ಸರ್ಕಾರ ಜಾರಿಗೆ ತರುವ ಮುನ್ನ ರಾಜ್ಯ ಸರ್ಕಾರ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯಬೇಕಾಗಿತ್ತು. ಆ ಮೂಲಕ ಈ ವಿಚಾರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂಬುದನ್ನು ತೋರಿಸುವ ಮೂಲಕ ಮಾದರಿಯಾಗಬೇಕಿತ್ತು ಎಂದರು.
ಮಸೂದೆ ಕುರಿತಂತೆ ವರ್ತಕರಲ್ಲಿ ಇನ್ನೂ ಗೊಂದಲ ಇದೆ. ಈ ಕುರಿತಂತೆ ಹೆಚ್ಚಿನ ಪ್ರಚಾರ ಮಾಡಬೇಕಾಗಿತ್ತು. ಅವರಿಗೆ ತಿಳುವಳಿಕೆ ಮೂಡಿಸಬೇಕಾಗಿತ್ತು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಕೃಷ್ಣಬೈರೇಗೌಡ, ಜಿಎಸ್ಟಿ ನೋಂದಣಿಯಲ್ಲಿ ನಾವು ದೇಶದಲ್ಲೇ ನಂ. 1 ಸ್ಥಾನದಲ್ಲಿದ್ದೇವೆ. ಜಿಎಸ್ಟಿ ಜಾರಿಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಲ್ಲಿಯೂ ಮುಂದಿದ್ದೇವೆ. ವರ್ತಕರಲ್ಲಿ ಯಾವುದೇ ಗೊಂದಲ ಇಲ್ಲ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos