ಬೆಂಗಳೂರು: ಕೆಲಸ ಕಳೆದುಕೊಂಡಿದ್ದ 35 ವರ್ಷದ ವ್ಯಕ್ತಿಯೊಬ್ಬರು ನಗರ ಪೊಲೀಸ್ ಆಯುಕ್ತರ ಕಚೇರಿ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ. ಇದರಿಂದ ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.
ಪೀಣ್ಯದಲ್ಲಿರುವ ಖಾಸಗಿ ಕಂಪನಿಯಲ್ಲಿ ಕಳೆದ 16 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಶ್ರೀನಾಥ್ ಎಂಬುವವರನ್ನು ನಾಲ್ಕು ವರ್ಷಗಳ ಹಿಂದೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ಇದನ್ನು ವಿರೋಧಿಸಿ ಶ್ರೀನಾಥ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ ಕಾರ್ಮಿಕ ಇಲಾಖೆಗೂ ದೂರು ಸಲ್ಲಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ನೊಂದ ಶ್ರೀನಾಥ್ ಅವರು ನ್ಯಾಯಕ್ಕಾಗಿ ಇಂದು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರನ್ನು ಭೇಟಿ ಮಾಡಲು ಬಂದಿದ್ದರು. ಆದರೆ ಪೊಲೀಸ್ ಸಿಬ್ಬಂದಿ ಆಯುಕ್ತರ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸ್ಥಳದಲ್ಲಿಯೇ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಶ್ರೀನಾಥ್ ಅವರನ್ನು ಪೊಲೀಸರು ತಕ್ಷಣ ವಶಕ್ಕೆ ಪಡೆದಿದ್ದು, ಆತ್ಮಹತ್ಯೆ ಯತ್ನವನ್ನು ವಿಫಲಗೊಳಿಸಿದ್ದಾರೆ. ಅಲ್ಲದೆ ಭದ್ರತಾ ಸಿಬ್ಬಂದಿಯ ಕಣ್ಣು ತಪ್ಪಿಸಿ ಶ್ರೀನಿವಾಸ್ ಸೀಮೆ ಎಣ್ಣೆಯೊಂದಿಗೆ ಹೇಗೆ ಆಯುಕ್ತರ ಕಚೇರಿ ಪ್ರವೇಶಿಸಿದ ಎಂಬುದರ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos