ಬೆಂಗಳೂರು: ಶಿವಾಜಿನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ಎಸ್ಎಸ್) ಮುಖಂಡ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ತನಿಖೆಯನ್ನು ಮಂಗಳವಾರ ಹೈಕೋರ್ಟ್ ಏಕ ಸದಸ್ಯ ಪೀಠ ರದ್ದುಗೊಳಿಸಿದೆ.
ತಮ್ಮ ವಿರುದ್ಧದ ಎನ್ಐಎ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಇರ್ಫಾನ್ ಪಾಷಾ ಸೇರಿ ಇತರ ಐವರು ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಿದ್ದು, ತಾಂತ್ರಿಕ ಕಾರಣಗಳಿಂದಾಗಿ ಎನ್ಐಎ ತನಿಖೆಯನ್ನು ರದ್ದುಗೊಳಿಸುತ್ತಿರುವುದಾಗಿ ಹೇಳಿದೆ.
ಮಾರ್ಚ್ 10ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮವಾಗಿ ವಾದ-ಪ್ರತಿವಾದ ಆಲಿಸಿದ್ದ ನ್ಯಾ. ಮೈಕಲ್ ಡಿ. ಕುನ್ಹಾ ಅವರು ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು.
2016ರ ಅಕ್ಟೋಬರ್ನಲ್ಲಿ ಆರೆಸ್ಸೆಸ್ ಪಥ ಸಂಚಲನ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ರುದ್ರೇಶ್ ಅವರನ್ನು ಶಿವಾಜಿನಗರದ ಬಳಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಆರೋಪಿಗಳಿಗೂ ಇಂಡಿಯನ್ ಮುಜಾಹಿದೀನ್ ಉಗ್ರರಿಗೂ ಸಂಪರ್ಕ ಇರುವ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್ಐಎ ಸ್ವಯಂ ಪ್ರೇರಿತವಾಗಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿತ್ತು. ಆದರೆ ಇದಕ್ಕೆ ಆರೋಪಿಗಳು ವಿರುದ್ಧ ವ್ಯಕ್ತಪಡಿಸಿ ಕೋರ್ಟ್ ಮೆಟ್ಟಿಲೇರಿದ್ದರು.
ಮೊದಲಿಗೆ ಪ್ರಕರಣದ ತನಿಖೆ ನಡೆಸಿದ್ದ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಐವರನ್ನು ಬಂಧಿಸಿದ್ದರು. ಆರೋಪಿಗಳೆಲ್ಲರೂ ಪಾಪುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರು ಎಂದು ವಿಚಾರಣೆ ವೇಳೆ ತಿಳಿದು ಬಂದಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos