ನವದೆಹಲಿ: ಬೆಳ್ಳಂದೂರು ಕೆರೆಯ ಮಲಿನಕ್ಕೆ ಕಾರಣವಾಗಿರುವ ಕೆರೆಯ ಸುತ್ತಲಿನ 76 ಕೈಗಾರಿಕೆಯನ್ನು ತಕ್ಷಣ ಮುಚ್ಚಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ ಜಿಟಿ) ಗುರುವಾರ ಆದೇಶ ನೀಡಿದೆ.
ಕಳೆದ ಏಪ್ರಿಲ್ 19ರಂದು ಕೆರೆಯ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದ ನ್ಯಾಯಮೂರ್ತಿ ಸ್ವತಂತ್ರಕುಮಾರ್ ನೇತೃತ್ವದ ಪೀಠ, ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್ಟಿಪಿ) ಸ್ಥಾಪಿಸದೇ ಇರುವ ಅಪಾರ್ಟ್ಮೆಂಟ್ (ವಸತಿ ಸಮುಚ್ಛಯ)ಗಳಿಗೆ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
76 ಕಾರ್ಖಾನೆಗಳು ಕೆರೆಯ ಮಾಲಿನ್ಯಕ್ಕೆ ಕಾರಣವಾಗಿರುವುದು ಬೆಳಕಿಗೆ ಬಂದಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲರು ತಿಳಿಸುತ್ತಿದ್ದಂತೆಯೇ ತೀವ್ರ ಆಕ್ರೊಶ ವ್ಯಕ್ತಪಡಿಸಿದ ನ್ಯಾಯಪೀಠವು, ನೀವು ಕೇವಲ ನೋಟಿಸ್ ನೀಡಿದರೆ ಸಾಲದು. ಈ ಕೂಡಲೇ ಕಾರ್ಖಾನೆಗಳಿಗೆ ಬೀಗ ಜಡಿಯಲು ಮುಂದಾಗಿ. ಆಗ ಮಾತ್ರ ನಿಮ್ಮ ಉದ್ದೇಶ ಈಡೇರಲು ಸಾಧ್ಯ ಎಂದು ಹೇಳಿದೆ.
ಮಾಲಿನ್ಯ ನಿಯಂತ್ರಣ ಮಂಡಳಿಯ ನೇತೃತ್ವದಲ್ಲಿ ರಚಿಸಲಾಗಿರುವ ಜಂಟಿ ತಪಾಸಣಾ ಸಮಿತಿಯು ಕೆರೆಯ ಸುತ್ತಮುತ್ತಲ ಪ್ರದೇಶದಲ್ಲಿ ನಿಯಮಿತವಾಗಿ ತಪಾಸಣೆ ನಡೆಸಬೇಕು. ಯಾವುದೇ ಕಾರಣಕ್ಕೂ ಕೆರೆಗೆ ಅಪಾಯಕಾರಿ ತ್ಯಾಜ್ಯ ಸೇರುವುದನ್ನು ಸಹಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಸಿದೆ.