ಬೆಂಗಳೂರು: ಖಾಸಗಿ ಆಸ್ಪತ್ರೆಗಳಿಗೆ ನಿಯಂತ್ರಣ ಹೇರಲು ರಾಜ್ಯ ಸರ್ಕಾರ ಜಾರಿಗೊಳಿಸಲು ಹೊರಟಿರುವ ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ (ಕೆಪಿಎಂಇ) ಮಸೂದೆ-2017ಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಖಾಸಗಿ ವೈದ್ಯರ ನಡುವಿನ ಸಂಘರ್ಷ ಮುಂದುವರೆದಿದ್ದು, ಇದೇ ನ.13ಕ್ಕೆ ಟಬೆಳಗಾವಿ ಚಲೋ' ನಡೆಸಲು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆ ನಿರ್ಧರಿಸಿದೆ.
ನ.13ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಸರ್ಕಾರ ಯೋಜಿಸಿರುವ ಕೆಪಿಎಂಇ ಮಸೂದೆ ಜಾರಿ ಮಾಡಬಾರದು, ಸರ್ಕಾರ ನೇಮಿಸಿದ್ದ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿಕ್ರಮ್ ಜಿತ್ ಸೇನ್ ಸಮಿತಿ ಸಲ್ಲಿಸಿದ ವರದಿಯನ್ನು ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಬೆಳಗಾವಿ ಚಲೋ ನಡೆಸಲು ಖಾಸಗಿ ವೈದ್ಯರ ಸಂಘ ಭಾನುವಾರ ತೀರ್ಮಾನಿಸಿದೆ.
ಬೆಳಗಾವಿಯಲ್ಲಿ ನ.13ರಿಂದ ಚಳಿಗಾಲ ಅಧಿವೇಶನ ಆರಂಭಗೊಳ್ಳಲಿದ್ದು, ಅಧಿವೇಶನದ ಮೊದಲ ದಿನೇ 25,000ಕ್ಕೂ ಹೆಚ್ಚು ವೈದ್ಯರು ಕೆಪಿಎಂಇ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಿದ್ದಾರೆಂದು ಐಎಂಎ ಕಾರ್ಯದರ್ಶಿ ಡಾ.ಬಿ. ವೀರಣ್ಣ ಅವರು ಹೇಳಿದ್ದಾರೆ.
ಪ್ರತಿಭಟನೆ ವೇಳೆ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆ, ಕ್ಲಿನಿಕ್, ನರ್ಸಿಂಗ್ ಹೋಂಗಳಲ್ಲಿ ಹೊರ ರೋಗಿ ವಿಭಾಗದ ಸೇವೆಗಳು ಸ್ಥಗಿತಗೊಳ್ಳಲಿವೆ. ತುರ್ತುಸೇವೆ ಹಾಗೂ ಒಳರೋಗಿಗಳ ಸೇವೆಯಲ್ಲಿ ವ್ಯತ್ಯಯ ಇರುವುದಿಲ್ಲ. ಆ ಮೂಲಕ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು ಒಂದಾಗಿ ಸರ್ಕಾರದ ಮೇಲೆ ಒತ್ತಡ ಹೇರಲಿದ್ದೇವೆಂದು ತಿಳಿಸಿದ್ದಾರೆ.