ಬೆಳಗಾವಿ: ಬಿಜೆಪಿ ನಾಯಕ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಬಿಜೆಪಿ ನಾಯಕರು ಅನಗತ್ಯವಾಗಿ ಪ್ರಕರಣದಲ್ಲಿ ನನ್ನ ಹೆಸರು ಥಳಕು ಹಾಕುತ್ತಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅವರು ಶುಕ್ರವಾರ ಹೇಳಿದ್ದಾರೆ.
ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಕೈವಾಡವಿದ್ದು, ಸತ್ಯ ಹೊರಬರಬೇಕಾದರೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ವಿನಯ್ ಕುಲಕರ್ಣಿ ಅವರ ರಾಜಿನಾಮೆ ಪಡೆಯಬೇಕು ಎಂದು ಬಿಜೆಪಿ ಮತ್ತು ಯೋಗೀಶ್ ಗೌಡ ಕುಟುಂಬ ಆಗ್ರಹಿಸಿದೆ.
ಸಚಿವ ವಿನಯ್ ಕುಲಕರ್ಣಿ ಅವರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಮತ್ತು ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರುತ್ತಿರುವುದಾಗಿ ಯೋಗೀಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಅವರು ನಿನ್ನೆ ಸಂದರ್ಶನವೊಂದರಲ್ಲಿ ಆರೋಪಿಸಿದ್ದರು.
ಯೋಗೀಶ್ ಗೌಡ ಕುಟುಂಬದ ಆರೋಪದ ಬಗ್ಗೆ ಇಂದು ಸುವರ್ಣಸೌಧದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ವಿನಯ್ ಕುಲಕರ್ಣಿ, ಬಿಜೆಪಿ ನಾಯಕರು ಅನಗತ್ಯವಾಗಿ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನನ್ನ ಹೆಸರು ಎಳೆಯುತ್ತಿದ್ದಾರೆ. ಈ ಕೊಲೆಗೆ ನನಗೂ ಯಾವುದೇ ಸಂಬಂಧವಿಲ್ಲ. ಪ್ರತ್ಯೇಕ ಲಿಂಗಾಯತ ಧರ್ಮದ ಸಮಾವೇಶದಿಂದ ನನ್ನ ಹಿಂದೆ ಸರಿಯುವಂತೆ ಮಾಡಲು ಬಿಜೆಪಿ ಈ ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.
ಯೋಗೀಶ್ ಗೌಡ ಕೊಲೆ ಪ್ರಕರಣ ಸದ್ಯ ಕೋರ್ಟ್ ನಲ್ಲಿದ್ದು, ಆ ಬಗ್ಗೆ ಕೋರ್ಟ್ ನಿರ್ಧಾರ ತೆಗೆದುಕೊಳ್ಳಲಿದೆ. ಗುರುನಾಥ್ ಗೌಡ ಸೇರಿದಂತೆ ನಾನು ಯಾರ ಮೇಲೂ ಒತ್ತಡ ಹಾಕಿಲ್ಲ. ಯೋಗೀಶ್ ಅವರು ಮತ್ತೊಂದು ಪಕ್ಷದಲ್ಲಿದ್ದ ಮಾತ್ರಕ್ಕೆ ನನ್ನ ಮೇಲೆ ಆರೋಪ ಮಾಡುವುದು ಸರಿಯಲ್ಲ. ಅವರು ನನ್ನನ್ನು ಯಾವತ್ತೂ ಭೇಟಿ ಮಾಡಿಲ್ಲ ಎಂದಿದ್ದಾರೆ.
ಕಳೆದ ವರ್ಷ ಜೂನ್ 15ರಂದು ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಅವರನ್ನು ಅವರ ಜಿಮ್ ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos