ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಅವರನ್ನು ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಟಿಎಂ ವಿಜಯಭಾಸ್ಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಹಾಲಿ ಮುಖ್ಯ ಕಾರ್ಯದರ್ಶಿ ಡಾ.ಸುಭಾಷ್ಚಂದ್ರ ಕುಂಟಿಯಾ ಅವರು ಈ ತಿಂಗಳಾಂತ್ಯಕ್ಕೆ ನಿವೃತ್ತಿಯಾಗುತ್ತಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಸೇವಾ ಜೇಷ್ಠತೆ ಆಧಾರದ ಮೇಲೆ ರತ್ನಪ್ರಭಾ ಅವರನ್ನು ನೇಮಕ ಮಾಡಲಾಗಿದೆ.
ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸೇವೆಯಲ್ಲಿ ಹಿರಿಯರಾದ ರತ್ನಪ್ರಭಾ, ವಿಜಯಭಾಸ್ಕರ್ ಹಾಗೂ ಎಸ್.ಕೆ. ಪಟ್ಟನಾಯಕ್ ಅವರ ಹೆಸರು ಕೇಳಿಬರುತ್ತಿತ್ತು. ಆದರೆ ಚುನಾವಣಾ ವರ್ಷದಲ್ಲಿ ಮಹಿಳಾ ಮತ ಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮವಾಗಿ ಮಹಿಳೆಗೆ ಮಣೆ ಹಾಕಿದ್ದಾರೆ.
1981ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ರತ್ನಪ್ರಭಾ ಮೂಲತಃ ಆಂಧ್ರಪ್ರದೇಶದವರಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಕೆಲಸ ಮಾಡಿದ್ದಾರೆ. ರಾಜ್ಯದ ಕೈಗಾರಿಕಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವಿಶ್ವ ಬಂಡವಾಳ ಹೂಡಿಕೆಯಂಥ ಬೃಹತ್ ಕಾರ್ಯಕ್ರಮಗಳನ್ನು ನಿರ್ವಹಿಸಿದ ಅನುಭವವಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos