ಬೆಂಗಳೂರು: ಮಂಗಳವಾರ ರಾತ್ರಿ ಹತ್ಯೆಗೀಡಾದ ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನವನ್ನು ಸಂಸ ಬಯಲು ರಂಗಮಂದಿರದಲ್ಲಿ ಮಾಡಲಾಗುತ್ತದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಖ್ಯಾತ ನಿರ್ದೇಶಕ ಹಾಗೂ ಗೌರಿ ಲಂಕೇಶ್ ಅವರ ಸಹೋದರ ಇಂದ್ರಜಿತ್ ಲಂಕೇಶ್ ಅವರು, ಕುಟುಂಬಸ್ಥರೊಂದಿಗೆ ಚರ್ಚಿಸಲಾಗಿದ್ದು, ಗೌರಿ ಲಂಕೇಶ್ ಅವರ ಅಂತಿಮ ವಿಧಿವಿಧಾನವನ್ನು ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ಮಾಡಲಾಗುತ್ತದೆ. ಅಂತೆಯೇ ಮರಣೋತ್ತರ ಪರೀಕ್ಷೆ ಬಳಿಕ ಮೂರು ಗಂಟೆಗಳ ಕಾಲ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಇದಕ್ಕಾಗಿ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಇನ್ನು ಮೃತ ಗೌರಿ ಲಂಕೇಶ್ ಅವರ ಪಾರ್ಥೀವ ಶರೀರ ಪ್ರಸ್ತುತ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆ ವೈದ್ಯರು ಪಾರ್ಥೀವ ಶರೀರದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಬಳಿಕ ದೇಹವನ್ನು ಕುಟುಂಬಸ್ಥರಿಗೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.