ತುಮಕೂರು: ವೀರಶೈವ ಮತ್ತು ಲಿಂಗಾಯತ ಎರಡೂ ಪದದ ಅರ್ಥ ಒಂದೇಯಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಲಿಂಗಾಯತ ಎಂಬ ಪದ ಬಳಸುತ್ತಾರೆ ಮತ್ತು ನಗರ ಪ್ರದೇಶದ ವಿದ್ಯಾವಂತರು ವೀರಶೈವ ಎಂಬ ಪದ ಬಳಸುತ್ತಿರುವುದಾಗಿ ತುಮಕೂರು ಸಿದ್ದಗಂಗಾ ಮಠದ ಪೀಠಾಧೀಶ ಶಿವಕುಮಾರ ಸ್ವಾಮೀಜಿ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತಂತೆ ಸಿದ್ದಗಂಗಾಶ್ರೀಗಳು ಸಹಮತ ಸೂಚಿಸಿದ್ದಾರೆ ಎಂಬ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೆ ಗ್ರಾಸವಾದ ಹಿನ್ನೆಲೆಯಲ್ಲಿ ಸ್ವತಃ ಸಿದ್ಧಗಂಗಾಶ್ರೀಗಳೇ ಇಂದು ಮಾಧ್ಯಮ ಪ್ರಕಟಣೆ ನೀಡಿದ್ದು, ದಿನಾಂಕ 10-9-2017ರಂದು ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವರಾದ ಎಂ.ಬಿ.ಪಾಟೀಲ್ ರವರು ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದಾಗ ಅವರು ನಮ್ಮೊಡನೆ ವೀರಶೈವ/ ಲಿಂಗಾಯತ ಸ್ವತಂತ್ರ ಧರ್ಮದ ವಿಷಯದ ಬಗ್ಗೆ ಚರ್ಚಿಸಿದಾಗ ವೀರಶೈವ ಎಂಬ ಪದ ವಿದ್ಯಾವಂತರು ಮತ್ತು ನಗರ ಪ್ರದೇಶದಲ್ಲಿ ಬಳಕೆಯಲ್ಲಿದೆ.
ಲಿಂಗಾಯಿತ ಎಂಬ ಪದ ಗ್ರಾಮೀಣ ಪ್ರದೇಶದಲ್ಲಿ ಬಳಕೆಯಲ್ಲಿದ್ದು ಈ ಎರಡು ಪದಗಳು ಒಂದೇ ಆಗಿದ್ದು ಎಲ್ಲಾ ಧಾರ್ಮಿಕ ಮುಖಂಡರು ಹಾಗೂ ಸಮಾಜಬಾಂಧವರು ಒಂದೆಡೆ ಕುಳಿತು ಸರ್ವ ಸಮ್ಮತವಾದ ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂದು ನಮ್ಮ ಅಭಿಪ್ರಾಯ ತಿಳಿಸಿರುತ್ತೇವೆ.
ಆದರೆ ಮಾನ್ಯ ಶ್ರೀ ಎಂ.ಬಿ.ಪಾಟೀಲ್ ರವರು ಲಿಂಗಾಯಿತ ಪದದ ಪರವಾಗಿ ಬೆಂಬೆಲ ಸೂಚಿಸಿದ್ದಾರೆ ಎಂಬಂತೆ ಮಾಧ್ಯಮಗಳಲ್ಲಿ ಪ್ರಕಟಿಸಿರುವುದು ತಿಳಿದು ಬಂದಿದೆ. ಸಮಾಜವನ್ನು ಈ ರೀತಿ ಇಬ್ಭಾಗ ಮಾಡುವ ರೀತಿಯಲ್ಲಿ ಯಾರೇ ಪ್ರಯತ್ನಿಸಿದರೂ ಸಮಾಜದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಸಮಾಜದ ಮುಖಂಡರೆಲ್ಲ ಕುಳಿತು ಚರ್ಚಿಸಿ ಒಮ್ಮತ ರೂಪಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಶ್ರೀಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos