ತುಮಕೂರು: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಿದ್ದಗಂಗಾ ಶ್ರೀಗಳ ತೀರ್ಮಾನವೇ ಅಂತಿಮ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ಶ್ಯಾಮನೂರು ಶಿವಶಂಕರಪ್ಪ ಅವರು, ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಶತಾಯಿಷಿಗಳು ಶ್ರೀಗಳೊಂದಿಗೆ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ಗೊಂದಲದ ಬಗ್ಗೆ ಉಭಯ ನಾಯಕರು ಚರ್ಚಿಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ಯಾಮನೂರು ಶಿವಶಂಕರಪ್ಪ ಅವರು, "ವೀರಶೈವ-ಲಿಂಗಾಯತರಲ್ಲಿ ಯಾವುದೇ ಭೇದ ಭಾವ ಇಲ್ಲ. ಎರಡೂ ಧರ್ಮಗಳು ಒಂದೇ ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಹೇಳಿದ್ದಾರೆ. ಹೀಗಾಗಿ ಶ್ರೀಗಳ ತೀರ್ಮಾನವೇ ಅಂತಿಮ ಎಂದು ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು.
"ಅಂಗೈಯಲ್ಲಿ ಲಿಂಗ ಇಟ್ಟು ಪೂಜಿಸುವವರೆಲ್ಲ ಲಿಂಗಾಯಿತರೇ ಎಂದು ಶ್ರೀಗಳು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಈ ಗೊಂದಲದ ನಿವಾರಣೆಗಾಗಿ ನಾವೆಲ್ಲಾ ಒಟ್ಟಾಗಿ ಕುಳಿತು ಚರ್ಚಿಸುತ್ತೇವೆ. ಸಚಿವ ಎಂ.ಬಿ. ಪಾಟೀಲ್ ಅವರನ್ನು ಗಣನೆಗೆ ತೆಗೆದುಕೊಂಡು ಮಾತನಾಡಲಿದ್ದೇವೆ. ಶೀಘ್ರ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.
ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಮಾನ್ಯತೆ ನೀಡಬೇಕೆಂದು ಮನವಿ ಮಾಡಿದ್ದೆವು. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಹೋಗಿದ್ದು, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಕೇಳಿದ್ದೆವು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಲಿಂಗಾಯತ ಬೇರೆ, ವೀರಶೈವ ಬೇರೆ ಎಂಬ ಗೊಂದಲ ಸೃಷ್ಠಿಯಾಗಿದೆ. ವೀರಶೈವ-ಲಿಂಗಾಯತ ಒಂದೇ ಎಂದು ಮಹಾಸಭಾ ಎಲ್ಲರನ್ನು ಒಗ್ಗೂಡಿಸಬೇಕು. ವೀರಶೈವ ಲಿಂಗಾಯತರಲ್ಲಿ ಒಡಕಿಗೆ ಆಸ್ಪದವಿಲ್ಲ. ಈ ವಿಚಾರದಲ್ಲಿ ಗೊಂದಲ ಬೇಡ. ಭಿನ್ನಾಭಿಪ್ರಾಯದ ಕುರಿತು ಮುಖಂಡರು ಒಂದೆಡೆ ಕುಳಿತು ಚರ್ಚಿಸಿ ಒಂದು ತೀರ್ಮಾನಕ್ಕೆ ಬರುವುದಾಗಿ ಶ್ಯಾಮನೂರು ಹೇಳಿದರು.