ಜನಾರ್ದನ ರೆಡ್ಡಿ(ಸಂಗ್ರಹ ಚಿತ್ರ)
ನವದೆಹಲಿ: ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರಿಗೆ ದಸರಾ ಆಚರಣೆಗಾಗಿ ಮೂರು ದಿನ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ದಸರಾ ಆಚರಣೆ ಅಂಗವಾಗಿ ತಮ್ಮ ಕುಟುಂಬದವರ ಜೊತೆ ಸಾಂಪ್ರದಾಯಿಕ ವಿಧಿ ವಿಧಾನಗಳಲ್ಲಿ ಭಾಗವಹಿಸಲು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 1ರವರೆಗೆ ರೆಡ್ಡಿ ಅವರಿಗೆ ಬಳ್ಳಾರಿಗೆ ತೆರಳಲು ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ ಹಾಗೂ ಅಶೋಕ್ ಭೂಷಣ್ ಅವರ ಪೀಠ ಅನುಮತಿ ನೀಡಿತು. ಬಳ್ಳಾರಿಗೆ ಹೋಗಲು ಅನುಮತಿ ಕೋರಿ ಜನಾರ್ದನ ರೆಡ್ಡಿಯವರು ಈ ಹಿಂದೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರು.
ಅಕ್ರಮ ಗಣಿಗಾರಿಕೆ ಕೇಸು ಮತ್ತು ಒಬುಳಾಪುರಂ ಗಣಿ ಕಂಪೆನಿಯ ಅಕ್ರಮ ವ್ಯವಹಾರಕ್ಕೆ ಸಂಬಂಧಪಟ್ಟಂತೆ 2011ರ ಸೆಪ್ಟೆಂಬರ್ 5ರಂದು ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ಜನಾರ್ದನ ರೆಡ್ಡಿ ಅವರಿಗೆ, ಬಳ್ಳಾರಿ, ಅನಂತಪುರ ಮತ್ತು ಕಡಪಗಳಿಗೆ ತೆರಳದಂತೆ ಷರತ್ತು ವಿಧಿಸಿ 2015ರ ಜನವರಿ 21ರಂದು ಜಾಮೀನು ನೀಡಲಾಗಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos