ಮಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾನುವಾರ ಸಂಜೆಯಿಂದ ಮತ್ತೆ ಮಳೆ ಬಿರುಸಾಗಿದೆ. ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಆ.13ರಂದು ಸೋಮವಾರ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಸಾರಿ ಮೂರೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ತುಸು ಕಡಿಮೆಯಾದಂತೆ ಕಂಡಿದ್ದ ಮಳೆ ಭಾನುವಾರ ಮಧ್ಯಾಹ್ನದ ಬಳಿಕ ಮತ್ತೆ ರಭಸವಾಗಿ ಸುರಿಯುತ್ತಿದೆ.ಮೂರು ಜಿಲ್ಲೆಗಳ ನದಿಗಳು ಬಹುತೇಕ ತುಂಬಿ ಹರಿಯುತ್ತಿದೆ.ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ನದಿ ಪಾತ್ರದ ಜನರನ್ನು ಸ್ಥಳಾಂತರೈಸಲು ನಿರ್ಧರಿಸಲಾಗಿದ್ದು ನದಿ ನೀರಿನ ಮಟ್ಟದ ಕುರಿತು ಆಡಳಿತ ವರ್ಗ ತೀವ್ರ ಕಟ್ಟೆಚ್ಚರ ವಹಿಸಿದೆ.
ಪ್ರಮುಖ ಯಾತ್ರಾಸ್ಥಳಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿ ಹಲವು ದೇವಾಲಯಗಳ ತೀರ್ಥ ಸ್ನಾನಘಟ್ಟಗಳಲ್ಲಿ ಪೋಲೀಸರನ್ನು ನಿಯೋಜಿಸಲಾಗಿದೆ.