ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ನೀಡಲಾಗುತ್ತಿದ್ದು, ಈ ಯೋಜನೆಯಲ್ಲೂ ಹಗರಣ ನಡೆದಿರುವ ಸಾಧ್ಯತೆಗಳನ್ನು ಸ್ವತಃ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವರೇ ಒಪ್ಪಿಕೊಂಡಿದ್ದಾರೆ.
ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಭಾಗವಹಿಸಿದ್ದರು. ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ವಿತರಣೆ ಮಾಡಲಾಗುತ್ತಿರುವ ವಿಷಯ ಈ ಸಭೆಯಲ್ಲಿ ಬಹಿರಂಗವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಶಾಲಿನಿ ರಜನೀಶ್ ಸಭೆಯಲ್ಲಿ ಶೂ ವಿತರಣೆ ಯೋಜನೆಯ ಬಗ್ಗೆ ವಿವರಣೆ ನೀಡಿದ್ದು, ಆ.15 ರ ವೇಳೆಗೆ ಎಲ್ಲಾ ಶಾಲೆಗಳಿಗೂ ಶೂಗಳನ್ನು ತಲುಪಿಸಲಾಗುವುದು ಎಂದು ಹೇಳುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಸಚಿವರು ಶೂಗಳ ಗುಣಮಟ್ಟ ಉತ್ತಮವಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಕಳಪೆ ಗುಣಮಟ್ಟದ ಶೂಗಳ ವಿತರಣೆ ವರದಿಯಾಗಿದೆ. ಈ ಬಗ್ಗೆ ಗಮನ ಹರಿಸಿ ವರದಿ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಮಟ್ಟದಲ್ಲಿರುವ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ. ಸರ್ಕಾರದಿಂದ ವಿತರಣೆಯಾಗುತ್ತಿರುವ ಶೂಗಳ ಗುಣಮಟ್ಟವನ್ನು ತಿಳಿದುಕೊಳ್ಳಲು ಸಚಿವರು ಸ್ವತಃ ಒಬ್ಬ ವಿದ್ಯಾರ್ಥಿಯ ಶೂವನ್ನು ಪರೀಕ್ಷಿಸಿದ್ದಾರೆ.
ಚಾಮರಾಜನಗರದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವರು ವಿದ್ಯಾರ್ಥಿಯೊಬ್ಬ ಧರಿಸಿದ್ದ ಶೂವನ್ನು ಕೆಗೆತ್ತಿಕೊಂಡು ಪರಿಶೀಲನೆ ನಡೆಸಿದ್ದರು. ನಂತರ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡಿದ್ದ ಸಚಿವರು ಈಗ ಪೂರೈಕೆಯಾಗಿರುವ ಶೂಗಳು ಬ್ರಾಂಡೆಡ್ ಸಂಸ್ಥೆಯ ಹೆಸರಿನ ನಕಲಿ ಶೂಗಳಾಗಿದ್ದಿರಬಹುದು ಅಥವಾ ಪೂರೈಕೆ ಮಾಡುತ್ತಿರುವ ಸಂಸ್ಥೆಯೇ ಕಳಪೆ ಗುಣಮಟ್ಟದ ಶೂಗಳನ್ನು ಪೂರೈಕೆ ಮಾಡುತ್ತಿರಬಹುದು ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics