ಬೆಂಗಳೂರು: ರೈತರ ಬೆಳೆ ಸಾಲಮನ್ನಾ, ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುವಾರ ರೈತ ಮುಖಂಡರೊಂದಿಗೆ ನಡೆಸಿದ ಸಭೆ ನಿರಾಸೆಯಲ್ಲಿ ಮುಕ್ತಾಯವಾಯಿತು.
ಸಭೆ ಬಳಿಕ ರೈತ ಮುಖಂಡ ಕುರುಬೂರು ಶಾಂತಕುಮಾರ್ ಮಾತನಾಡಿ, ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ಖಚಿತ ಫಲಿತಾಂಶ ನೀಡುವಲ್ಲಿ ವಿಫಲವಾಗಿದ್ದು ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ. ಈ ಹಿನ್ನೆಲೆಯಲ್ಲಿ ಡಿ.9ರಂದು ಬೆಳಗಾವಿ ಡಿಸಿ ಕಚೇರಿ ಎದುರು ಚಳವಳಿ ನಡೆಸುತ್ತೇವೆ. ಸರ್ಕಾರ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಅನಿವಾರ್ಯವಾಗುತ್ತದೆ ಎಂದರು.
ಸಾಲ ಕಟ್ಟದ ರೈತರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ಬ್ಯಾಂಕ್ ಗಳಿಗೆ ಸಿಎಂ ನೋಟಿಸ್ ನೀಡಬೇಕು, ಆದರೆ ಸಿಎಂ ಕುಮಾರ ಸ್ವಾಮಿ ಮತ್ತದೇ ಹಳೇಯ ಕಥೆ ಹೇಳುತ್ತಿದ್ದಾರೆ, ಮತ್ತಷ್ಟು ಸಮಯ ತಾಳ್ಮೆಯಿಂದ ಇರುವಂತೆ ಸಿಎಂ ಹೇಳುತ್ತಿದ್ದಾರೆ, ಇದರಿಂದ ನಮಗೆ ಅಸಮಾಧಾನ ಹಾಗೂ ನಿರಾಸೆಯಾಗಿದೆ ಎಂದು ಹೇಳಿದ್ದಾರೆ.
ಮೊದಲ ಹಂತದಲ್ಲಿ 50 ಸಾವಿರ ರೂ ಬೆಳೆ ಸಾಲ ಮನ್ನಾ ಮಾಡುವುದಾಗಿ ಕುಮಾರ ಸ್ವಾಮಿ ಹೇಳಿದ್ದಾರೆ, ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಬಹುತೇಕ ರಾಜಕಾರಣಿಗಳೇ. ಕಬ್ಬು ಬೆಳೆಗಾರರ ವಿಚಾರದಲ್ಲಿ ಇದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ರೈತರ ಮುಗ್ಧತೆಯನ್ನು ಕಾರ್ಖಾನೆಗಳ ಮಾಲೀಕರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಡಿಸೆಂಬರ್ 9 ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಹಾಗೂ ಡಿಸೆಂಬರ್ 10ರಂದು ಇಡೀ ರಾಜ್ಯಾದ್ಯಂತ ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಶಾಂತಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos