ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದು
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಒಂಬತ್ತು ಭಕ್ತರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಮೃತ ಭಕ್ತರನ್ನು ಗೋಪಿಯಮ್ಮ(35), ಶಾಂತಾ (20) ಪಾಪಣ್ಣ(35) ಹಾಗೂ ಬಾಲಕಿ ಅನಿತಾ(14) ಎಂದು ಗುರುತಿಸಲಾಗಿದ್ದು, ಅಸ್ವಸ್ಥಗೊಂಡವರನ್ನೆಲ್ಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸುಲ್ವಾಡಿಯ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕುಸ್ಥಾಪನೆ ಸಮಾರಂಭದಲ್ಲಿ ಈ ಅವಘಡ ಸಂಭವಿಸಿದೆ.
ಕಾರ್ಯಕ್ರಮದಲ್ಲಿ ರೈಸ್ಬಾತ್ ತಯಾರಿಸಲಾಗಿತ್ತು. ಅದನ್ನು ತಿಂದ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದಾರೆ. ಆದರೆ ಯಾವ ಕಾರಣಕ್ಕೆ ಅಸ್ವಸ್ಥರಾದರು ಎಂಬುದಾಗಿ ತಿಳಿದಿಲ್ಲ ಎಂದು ಕೆಲ ಭಕ್ತರು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ದೇವಾಲಯದ ಗೋಪುರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎರಡು ಬಣಗಳ ನಡುವೆ ದ್ವೇಷವಿತ್ತು. ಹೀಗಾಗಿ ಒಂದು ಬಣದವರು ಪ್ರಸಾದಕ್ಕೆ ವಿಷಪ್ರಾಶನ ಮಾಡಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಪ್ರಸಾದವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜಿಲ್ಲಾಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಹನೂರು ಶಾಸಕ ನಾಗೇಂದ್ರ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos