ಹೈದರಾಬಾದ್: ಕರ್ನಾಟಕ ಲೋಕಾಯುಕ್ತದಲ್ಲಿದ್ದಾಗ ಖಡಕ್ ಐಪಿಎಸ್ ಅಧಿಕಾರಿ ಎನಿಸಿಕೊಂಡಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ನ್ಯಾಷನಲ್ ಪೋಲೀಸ್ ಅಕಾಡಮಿಯ ಉಪನಿರ್ದೇಶಕ ಮಧುಕರ್ ಶೆಟ್ಟಿ ಎಚ್1 ಎನ್1 ಸೋಂಕಿನಿಂದ ಬಳಲುತ್ತಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಹೈದರಾಬಾದದ್ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಧುಕರ್ ಶೆಟ್ಟಿ ಶ್ವಾಸಕೋಶ ಹಾಗೂ ಜೀರ್ಣಾಂಗ ಸಮಸ್ಯೆಯಿಂದ ಬಳಲುತ್ತಿದ್ದಾರೆ.ಸಧ್ಯ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದ್ದು ಮುಂದಿನ ಹನ್ನೆರಡು ಗಂಟೆ ಅತ್ಯಂತ ಸೂಕ್ಷ್ಮವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿದೆ.
1999ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಮಧುಕರ್ ಶೆಟ್ಟಿ ಮೂಲತಃಅ ಉಡುಪಿ ಜಿಲ್ಲೆಯವರಾಗಿದ್ದಾರೆ. ಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿಯವರ ಪುತ್ರರಾದ ಇವರು ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರದಲ್ಲಿ ಎಂಎ ಹಾಗೂ ನ್ಯೂಯಾರ್ಕ್ ವಿವಿನಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ.
ಚಿಕ್ಕಮಗಳೂರಿನ ಎಸ್ಪಿಯಾಗಿ ಸೇವೆ ಸಲ್ಲಿಸುವ ವೇಳೆ ಜನಾನುರಾಗಿ ಅಧಿಕಾರಿ ಎಂದು ಹೆಸರಾಗಿದ್ದ ಇವರು ಜಿಲ್ಲಾಧಿಕಾರಿ ಹರ್ಷಗುಪ್ತ ಅವರೊಡನೆ ಸೇರಿ ಒತ್ತುವರಿಯಾಗಿದ್ದ ಜಮೀನನ್ನು ಬಿಡಿಸಿ ದಲಿತರಿಗೆ ಕೊಟ್ಟಿದ್ದರು. ಆ ಊರಿಗೆ ಗುಪ್ತಶೆಟ್ಟಿಹಳ್ಳಿ ಎಂದು ಹೆಸರಿಟ್ಟಿದ್ದಾರೆ.
ಮಧುಕರ್ ಶೆಟ್ಟಿ ಆರೋಗ್ಯ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಮಾಹಿತಿ ಕಲೆಹಾಕಿದ್ದಾರೆ. ತೆಲಂಗಾಣ ಸರ್ಕಾರ ಅವರ ಚಿಕಿತ್ಸೆಗೆ ಬೇಕಾದ ಎಲ್ಲಾ ಸಹಕಾರ ನೀಡುತ್ತಿದೆ ಎಂದು ತಿಳಿದುಬಂದಿದೆ.