ಉಡುಪಿ: ಇಂದು(ಡಿಸೆಂಬರ್ 27) ರಾಷ್ಟ್ರಪತಿ ರಾಮನಾಥ ಕೋವಿಂದ್ ಉಡುಪಿಗೆ ಭೇಟಿ ನೀಡಲಿದ್ದಾರೆ.ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರು ಸನ್ಯಾಸ ಸ್ವೀಕರಿಸಿ 80 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಕೋವಿಂದ್ ಭಾಗವಹಿಸಲಿದ್ದಾರೆ.
ರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆಯಲ್ಲಿ ಮಠ ಹಾಗೂ ಸುತ್ತಮುತ್ತಲ ಪ್ರದೇಶ, ನಗರದಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಳಾಗಿದೆ.
ಶ್ರೀಕೃಷ್ಣ ಮಠದ ರಾಜಾಂಗಣದ ಬದಲು ರಥಬೀದಿಯಲ್ಲಿರುವ ಪೇಜಾವರ ಮಠದ ಎದುರು ನಿರ್ಮಿಸಲಾಗುವ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಪೇಜಾವರ ಶ್ರೀಗಳು ಸನ್ಯಾಸ ಸ್ವೀಕರಿಸಿ 80 ವರ್ಷವಾದ ಹಿನ್ನೆಲೆ ಅವರ ಶಿಷ್ಯೆಯಾಗಿರುವ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಉಡುಪಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದಾರೆ.
ಆದಿ ಉಡುಪಿ ಹೆಲಿ ಪ್ಯಾಡ್ಗೆ ಮಧ್ಯಾಹ್ನ 12ಕ್ಕೆ ರಾಷ್ಟ್ರಪತಿಗಳು ಆಗಮಿಸಲಿದ್ದು ಬನ್ನಂಜೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಕೆಲ ಸಮಯ ವಿಶ್ರಾಂತಿ ಪಡೆದು ಬಳಿಕ ನೇರವಾಗಿ ಕಾರ್ಯಕ್ರಮ ನಡೆಯುವ ವೇದಿಕೆಗೆ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಬಳಿಕ ಶ್ರೀಕೃಷ್ಣ ದರ್ಶನ ಪಡೆಯುವ ರಾಷ್ಟ್ರಪತಿಗಳು ನಂತರ ಪ್ರಸಾದ ಸ್ವೀಕರಿಸಿ ದೆಹಲಿಗೆ ನಿರ್ಗಮಿಸಲಿದ್ದಾರೆ.
ಭದ್ರತಾ ದೃಷ್ಠಿಯಿಂದ, ಉಡುಪಿಯ ಸಂಸ್ಕೃತ ಕಾಲೇಜು ಪಕ್ಕದ ಗೇಟಿನಿಂದ ಸಂಪೂರ್ಣ ರಥಬೀದಿಯ ಸುತ್ತ ಹಾಗೂ ರಾಜಾಂಗಣದ ಸುತ್ತಮುತ್ತ ಇರುವ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಹಾಗೆಯೇ ತುರ್ತು ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ಮಠ, ರಥಬೀದಿಯನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಬಿದ್ದ ಹೊಂಡ ಮುಚ್ಚಿ, ಪ್ಯಾಚ್ ವರ್ಕ್, ಡಾಮರೀಕರಣ ಕಾಮಗಾರಿಯನ್ನು ಜಿಲ್ಲಾಡಳಿತ ನಡೆಸಿದೆ.
ಭದ್ರತೆಗಾಗಿ ನಗರದಾದ್ಯಂತ 1,400ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.