ರಾಜ್ಯ

ಬೆಂಗಳೂರಿನ ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಮೈಸೂರಿಗೆ ಸ್ಥಳಾಂತರಿಸಲು ಐಎಎಫ್ ಬಯಸಿದೆ: ಸಿಎಂ ಕುಮಾರಸ್ವಾಮಿ

Manjula VN
ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿರುವ ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಮೈಸೂರಿಗೆ ಸ್ಥಳಾಂತರಿಸಲು ಭಾರತೀಯ ವಾಯುಪಡೆ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಹೇಳಿದ್ದಾರೆ. 
ವಿಮಾನಯಾನ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ವಿಮಾನ ನಿಲ್ದಾಣಕ್ಕೆ ಬೆಂಗಳೂರಿನ ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಸ್ಥಳಾಂತರ ಮಾಡುವುದರಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎದುರಾಗುವ ಸಮಸ್ಯೆಗಳು ಕಡಿಮೆಯಾಗಲಿದೆ. ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಸ್ಥಳಾಂತರ ಮಾಡಲು ಈಗಾಗಲೇ ಭಾರತೀಯ ವಾಯುಪಡೆ ಕೂಡ ಒಪ್ಪಿಗೆ ನೀಡಿದೆ. ಇದಕ್ಕಾಗಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡುವುದಾಗಿಯೂ ತಿಳಿಸಿದೆ ಎಂದು ಹೇಳಿದ್ದಾರೆ. 
ಪುಣೆ, ಶ್ರೀನಗರ, ಚಂಡೀಗಢ ವಿಮಾನ ನಿಲ್ದಾಣಗಳ ಮಾದರಿಯಲ್ಲಿ ಮೈಸೂರು ವಿಮಾನ ನಿಲ್ದಾಣವನ್ನು ಕೂಡ ತನ್ನದೇ ವೆಚ್ಚದಲ್ಲಿ ಅಭಿವೃದ್ಧಿಪಡಿಸಿ, ನಾಗರೀಕರ ಬಳಕೆ ಹಾಗೂ ಸೇನಾ ಬಳೆಕೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ವಾಯುಪಡೆ ಸಮ್ಮತಿ ನೀಡಿದೆ. ರಾಜ್ಯ ಸರ್ಕಾರವು ಈ ಸ್ಥಳಾಂತರಕ್ಕೆ ನಿರಾಕ್ಷೇಪಣಾ ಪತ್ರ ನೀಡಿದ್ದು, ಮೈಸೂರು ವಿಮಾನ ನಿಲ್ದಾಣ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸ್ವಾಧೀನದಲ್ಲಿದ್ದು, ಅವರೇ ಕಾರ್ಯಾಚರಣೆ ಮಾಡುತ್ತಿರುವ ಹಿನ್ನಲೆಯಲ್ಲಿ ಭಾರತೀಯ ವಾಯುಪಡೆಗೆ ಮೈಸೂರು ವಿಮಾನ ನಿಲ್ದಾಣವನ್ನು ಅವರ ಹೆಲಿಕಾಪ್ಟರ್ ಬೇಸ್'ಗೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 
ಕಾರವಾರ, ವಿಜಯಪುರ, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರಿನಲ್ಲಿ ಹೊಸ ವಿಮಾನ ನಿಲ್ದಾಣಗಳು ನಿರ್ಮಾಣಗೊಳ್ಳಲಿವೆ. ಬೀದರ್ ಹಾಗೂ ಕಲಬುರಗಿಯಲ್ಲಿನ ವಿಮಾನ ನಿಲ್ದಾಣಗಳು ಜ.15 ಬಳಿಕ ಕಾರ್ಯನಿರ್ವಹಿಸಲಿವೆ ಎಂದಿದ್ದಾರೆ. 
SCROLL FOR NEXT