ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜನಾರ್ದನ ರೆಡ್ಡಿ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಅಕ್ರಮ ಅದಿರು ಸಾಗಾಣಿಕೆ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಹಾಗೂ ಇತರರ ವಿರುದ್ಧ ಲೋಕಾಯುಕ್ತ ವಿಶೇಷ ತನಿಖಾ ತಂಡ ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಆಪ್ತ ಕೆ.ಎಂ.ಆಲಿಖಾನ್, ಬಿ.ವಿ.ಶ್ರೀನಿವಾಸ ರೆಡ್ಡಿ ಮತ್ತು ದೇವಿ ಎಂಟರ್ಪ್ರೈಸೆಸ್ ಪಾಲುದಾರ ಹಾಗೂ ಶ್ರೀ.ಮಿನರಲ್ಸ್ನ ಪಾಲುದಾರರ ವಿರುದ್ಧ ಭಾರತೀಯ ದಂಡ ಸಂಹಿತೆ 379, 420 ಮತ್ತು ಕರ್ನಾಟಕ ಅರಣ್ಯ ನಿಯಮ-1969ರ ಸೆಕ್ಷನ್ 165 ಅಡಿಯಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ.
ಜನಾರ್ದನ ರೆಡ್ಡಿ, ಆಪ್ತ ಕೆ.ಎಂ.ಆಲಿಖಾನ್, ಬಿ.ವಿ.ಶ್ರೀನಿವಾಸ ರೆಡ್ಡಿ ಮತ್ತು ದೇವಿ ಎಂಟರ್ಪ್ರೈಸೆಸ್ ಪಾಲುದಾರ ಹಾಗೂ ಶ್ರೀ.ಮಿನರಲ್ಸ್ನ ಪಾಲುದಾರ ಸೇರಿಕೊಂಡು ಬಳ್ಳಾರಿಯ ಎನ್.ಶೇಖ್ಸಾಬ್ ಎಂಬುವರಿಗೆ ಸೇರಿದ ಗಣಿಪ್ರದೇಶವನ್ನು ಬಲವಂತವಾಗಿ ನಿಯಂತ್ರಣಕ್ಕೆ ಪಡೆದುಕೊಂಡು ಅಕ್ರಮ ಗಣಿಗಾರಿಕೆ ನಡೆಸಿ ಸುಮಾರು 1,69,263 ಮೆಟ್ರಿಕ್ ಟನ್ ಪ್ರಮಾಣದ ಕಬ್ಬಿಣದ ಅದಿರನ್ನು ಅಕ್ರಮವಾಗಿ ತೆಗೆದಿರುವುದು ಪತ್ತೆಯಾಗಿತ್ತು.
ಶೇಖ್ಸಾಬ್ ಅವರ ಗಣಿಪ್ರದೇಶದಲ್ಲಿ ತೆಗೆದ ಕಬ್ಬಿಣದ ಅದಿರನ್ನು ಅಕ್ರಮವಾಗಿ ಮಾರಾಟ ಮಾಡಲು ಯಾವುದೇ ಪರವಾನಿಗೆ ಪಡೆಯದೇ ಪಾಪಿನಾಯಕನಹಳ್ಳಿ ಗ್ರಾಮ ವ್ಯಾಪ್ತಿಯ ಖಾಸಗಿ ಅನಧಿಕೃತ ಸ್ಥಳಕ್ಕೆ ಸಾಗಾಣಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಈ ಸ್ಥಳದ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಸಾಗಾಣಿಕೆ ಮಾಡಿದ್ದ ಅದಿರನ್ನು ವಶಪಡಿಸಿಕೊಂಡಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos