ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾವೇಶ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟರ್ ಮೂಲಕ ಪ್ರಧಾನಿಗೆ ಸ್ವಾಗತ ಕೋರಿದ್ದಾರೆ.
ಸಿದ್ದರಾಮಯ್ಯ ಟ್ವೀಟರ್ ನಲ್ಲಿ ನಮ್ಮ ಬೆಂಗಳೂರಿಗೆ ಇಂದು ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ ನಿಮಗೆ ಸ್ವಾಗತ. ಈ ಸಂದರ್ಭದಲ್ಲಿ ನೀವ ನಮ್ಮ ಜನರ ಮಹದಾಯಿ ಸಮಸ್ಯೆಯನ್ನು ನಿವಾರಣೆ ಮಾಡಲು ಸಹಕಾರ ನೀಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಟ್ವೀಟಿಸಿದ್ದಾರೆ.
ಇನ್ನು ಮತ್ತೊಂದು ಟ್ವೀಟ್ ನಲ್ಲಿ ಸಿದ್ದರಾಮಯ್ಯ ಅವರು ಹೂಡಿಕೆ, ಸಂಶೋಧನಾ ಕ್ಷೇತ್ರ, ಅಭಿವೃದ್ಧಿ ನೀತಿಗಳಲ್ಲಿ ನಂಬರ್ 1 ಸ್ಥಾನದಲ್ಲಿರುವ ಕರ್ನಾಟಕಕ್ಕೆ ಸ್ವಾಗತ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನೇತೃತ್ವದ 90 ದಿನಗಳ ಪರಿವರ್ತನಾ ಯಾತ್ರೆಯ ಸಮಾರೋಪ ಇಂದು ಅರಮನೆ ಮೈದಾನದಲ್ಲಿ ನಡೆಯಲಿದ್ದು, ಪ್ರಧಾನಿ ಮೋದಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ.