ಧಾರವಾಡ: ಸ್ವಾಮಿನಾಥನ್ ಆಯೋಗದ ವರದಿಯನ್ನು ಅನುಷ್ಠಾನಕ್ಕೆ ತರುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಸಲುವಾಗಿ ಮಾರ್ಚ್.23 ರಿಂದ ದೆಹಲಿಯಲ್ಲಿ ಹೋರಾಟ ಮಾಡುವುದಾಗಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಮಂಗಳವಾರ ಹೇಳಿದ್ದಾರೆ.
ನಗರದ ಕೃಷಿ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿರುವ ಅವರು, ಸ್ವಾಮಿನಾಥನ್ ಆಯೋಗದ ವರದಿ ಅನುಷ್ಠಾನ ಹಾಗೂ ರೈತರ ಬೆಳೆಗೆ ದೇಶದಾದ್ಯಂತ ಬೆಂಬಲ ಬೆಲೆ ನಿಗದಿಗೊಳಿಸುವಂತೆ ಆಗ್ರಹಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯಲಾಗಿದೆ. ಮಾ.23ರ ಒಳಗಾಗಿ ವರದಿ ಜಾರಿಗಾಯದಿದ್ದರೆ 2ನೇ ಸ್ವಾತಂತ್ರ್ಯ ಸಂಗ್ರಾಮದ ರೂಪದಲ್ಲಿ ತೀವ್ರ ಹೋರಾಟ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ದೇಶದ ರೈತರು ಭೂಮಿ ಉಳಿಮೆ ಮಾಡುವುದರಿಂದ ಹಿಡಿದು ಪೈರು ಕಟಾವು ಮಾಡಿ ಮಾರುಕಟ್ಟೆಗೆ ತರುವವರೆಗಿನ ಎಲ್ಲಾ ಖರ್ಚುಗಳನ್ನು ವೈಜ್ಞಾನಿಕವಾಗಿ ಪರಿಗಣನೆಗೆ ತೆಗೆದುಕೊಂಡು ಶೇ.50 ರಷ್ಟು ಬೆಂಬಲ ಬೆಲೆ ನಿಗದಿಕೊಳಿಸಬೇಕು. 60ವರ್ಷ ದಾಟಿದ ಹಿರಿಯ ಕೃಷಿಕರಿಗೆ ಕನಿಷ್ಟ ರೂ.5000 ಪಿಂಚಣಿ ನೀಡಬೇಕೆಂದು ಆಗ್ರಹಿಸಿದ್ದಾರೆ.