ಮಂಗಳೂರು: ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ವಿದ್ಯಾರ್ಥಿನಿಯರ ಮೇಲೆ ಹಿಂದೂ ಸಂಘಟನೆಯ ತಂಡವೊಂದು ಪೊಲೀಸರ ಎದುರೇ ಹಲ್ಲೆ ನಡೆಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಇಬ್ಬರು ವಿದ್ಯಾರ್ಥಿನಿಯರು ಒಬ್ಬ ಮುಸ್ಲಿಂ ವಿದ್ಯಾರ್ಥಿಯೊಂದಿಗೆ ಪಿಲಿಕುಳ ನಿಸರ್ಗಧಾಮಕ್ಕೆ ಬಂದಿದ್ದಾರೆ. ತರಗತಿ ವೇಳೆಯಲ್ಲಿಯೇ ಪಿಲಿಕುಳ ನಿಸರ್ಗಧಾಮದ ಮಾನಸ ಅಮ್ಯೂಸ್ ಮೆಂಟ್ ವಾಟರ್ ಪಾರ್ಕ್'ಗೆ ವಿದ್ಯಾರ್ಥಿಗಳು ಆಗಮಿಸಿದ್ದರು. ಅಮ್ಯೂಸ್ ಮೆಂಟ್ ಪಾರ್ಕ್ ನಲ್ಲಿ ವಾಟರ್ ಸ್ಪೋರ್ಟ್'ಗೆ ತೆರಳಿದ್ದ ವೇಳೆ ಅಲ್ಲಿನ ಯಾರೋ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಪೊಲೀಸರ ಜೊತೆಯಲ್ಲಿಯೇ ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ಅಮ್ಯೂಸ್ ಮೆಂಟ್ ವಾಟರ್ ಪಾರ್ಕ್ ನಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರ ಎದುರೇ ಹಿಂದೂ ಯುವತಿಗೆ ಹೊಡೆದಿದ್ದಾರೆ. ಬಳಿಕ ಮುಸ್ಲಿಂ ವಿದ್ಯಾರ್ಥಿಯನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ.
ಕೊನೆಗೆ ಪೊಲೀಸರೇ ವಿದ್ಯಾರ್ಥಿಗಳನ್ನು ರಕ್ಷಿಸಿ ವಿದ್ಯಾರ್ಥಿನಿಯರ ಸಮೇತ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ವಿದ್ಯಾರ್ಥಿಗಳ ಮೇಲೆ ನಡೆದಿರುವ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.