ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರದ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ಕೆಟ್ಟ ಆಡಳಿತದ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
ವರ್ಗಾವಣೆಯ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡ, ರೋಹಿಣಿ ಸಿಂಧೂರಿ ಜಿಲ್ಲೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದ ದಕ್ಷ ಅಧಿಕಾರಿಯಾಗಿದ್ದಾರೆ. ಆದರೆ ’ಕಲೆಕ್ಷನ್’ ಗೆ ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕಾಗಿ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಲಾಗಿದೆ ಎಂದು ದೇವೇಗೌಡ ಆರೋಪ ಮಾಡಿದು, ರಾಜ್ಯ ಸರ್ಕಾರದ ನಡೆಯನ್ನು ವಿವರಿಸಿ, ಸರ್ಕಾರದ ಕೆಟ್ಟ ಆಡಳಿತದ ಬಗ್ಗೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ವಿವರಿಸುವುದಾಗಿ ತಿಳಿಸಿದ್ದಾರೆ.
ಸಿಎಂ ಸಿದ್ದಾರಮಯ್ಯ ಸರ್ಕಾರವನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ದೇವೇಗೌಡ, ನಾನು ಮಾಜಿ ಪ್ರಧಾನಿ, ನನ್ನ ಕ್ಷೇತ್ರದಲ್ಲೆ ಈ ರೀತಿ ದಕ್ಷ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದಾದರೆ, ಇನ್ನು ಬೇರೆ ಪ್ರದೇಶಗಳಲ್ಲಿನ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ.