ಬೆಂಗಳೂರು: ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಪತ್ರಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್ ಹಾಕಿದೆ.
ಆಯೋಗದ ಪತ್ರದ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಮೂವರು ಜಿಲ್ಲಾಧಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ತಡೆ ನೀಡಿದ್ದು, ಈ ಮೂಲಕ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ವಿರೋಧ, ಬಿಜೆಪಿ ಪ್ರತಿಭಟನೆಗಳಿಗೆ ಸರ್ಕಾರ ಮಣಿದಂತಾಗಿದೆ.
ಇನ್ನು ಇದಕ್ಕೂ ಮೊದಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಮುಖ್ಯ ಕಾರ್ಯದರ್ಶಿ ರತ್ನಪ್ರಭ ಅವರಿಗೆ ಪತ್ರ ಬರೆದ ಬೆನ್ನಲ್ಲೇ, ರಾಜ್ಯ ಸರ್ಕಾರ ವರ್ಗಾವಣೆಗೆ ತಡೆ ನೀಡಿದೆ. ಅಂತೆಯೇ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಸಮ್ಮತಿ ನೀಡುವಂತೆ ಕೋರಿ ಮುಖ್ಯ ಚುನಾವಣಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ ಅವರೂ ಕೂ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದ್ದು, ಆಡಳಿತಾತ್ಮಕ ದೃಷ್ಟಿಕೋನದಿಂದ ವರ್ಗಾವಣೆ ಅವಶ್ಯಕವಾಗಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದಿದ್ದ ಆಯೋಗ, ವಿಶೇಷ ಪ್ರಕರಣಗಳಲ್ಲಿ ವರ್ಗಾವಣೆ ಮಾಡಬೇಕಾದರೆ ಆಯೋಗದ ಸಮ್ಮತಿ ಪಡೆಯಬೇಕು ಎಂದು ಹೇಳಿತ್ತು. ಈ ಪತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಆಕ್ಷೇಪಣೆ ವ್ಯಕ್ತಪಡಿಸಿದ ಮಾತ್ರಕ್ಕೆ ರಾಜ್ಯ ಸರ್ಕಾರ ವರ್ಗಾವಣೆ ಆದೇಶ ಹಿಂತೆಗೆದುಕೊಳ್ಳಬೇಕು ಅಥವಾ ತಡೆಹಿಡಿಯಬೇಕು ಅಂತಿಲ್ಲ. ಇನ್ನೂ ಚುನಾವಣಾ ಅಧಿಸೂಚನೆ ಹೊರಬಿದ್ದಿಲ್ಲ. ಆದರೂ ಆಯೋಗದೊಂದಿಗೆ ಸಂಘರ್ಷಕ್ಕೆ ಇಳಿಯುವುದು ಬೇಡ ಎಂಬ ಕಾರಣಕ್ಕೆ ನಿಯಮಾವಳಿ ಪ್ರಕಾರವೇ ಪತ್ರ ಬರೆದು ವರ್ಗಾವಣೆಗೆ ಅನುಮತಿ ಕೋರಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಇನ್ನು ಈ ಬಗ್ಗೆ ಮಾತನಾಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು, ಪ್ರಸ್ತುತ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ತಡೆ ನೀಡಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos