ಮಡಿಕೇರಿ: ಆನೆ ದಾಳಿಗೆ ರೈತ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಮೂವರು ಅರಣ್ಯಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಕೊಡುಗು ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜ್, ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕೃಷ್ಣರಾಜ್, ಆರ್.ಎಫ್.ಓ. ಗಂಗಾಧರ್ ವಿರುದ್ದ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಜನವರಿ 22 ರಂದು ವಿರಾಜಪೇಟೆ ತಾಲೂಕಿನ ಕರಡಿಡಗೋಡಿನಲ್ಲಿ ಮೋಹನ್ ದಾಸ್ (70) ಎಂಬುವವರು ಆನೆ ದಾಳಿಗೆ ಬಲಿಯಾಗಿದ್ದರು.
ಅಧಿಕಾರಿಗಳ ವಿರುದ್ದ ಎಫ್ಐಆರ್ ದಾಖಲಿಸಲು ವಿರಾಜಪೇಟೆಯ ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಅನುಮತಿ ನೀಡಿದ್ದಾರೆ. ಮೂವರು ಅಧಿಕಾರಿಗಳಿಗೆ ಸೇರಿದ ಆನೆ, ದಾಳಿ ಮಾಡಿ ದಾಸ್ ಅವರನ್ನು ಹತ್ಯೆ ಮಾಡಿದೆ ಎಂದು ಎಫ್ಐಆರ್ ನಲ್ಲಿ ತಿಳಿಸಲಾಗಿದೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಘಟನೆ ಸಂಭವಿಸಿದ್ದು, ಅಧಿಕಾರಿಗಳ ವಿರುದ್ದ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಸಂತ್ರಸ್ತ ವ್ಯಕ್ತಿಯ ಕುಟುಂಬಸ್ಥರಿಗೆ ರೂ.2 ಕೋಟಿ ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ.
ಎಎಫ್ಎಸ್ ಸಂಘಟನೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮಾತನಾಡಿ, ನಕಲಿ ಸಾಕ್ಷ್ಯಾಧಾರಗಳ ಮೂಲಕ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ. ಇದು ಐಪಿಸಿ ಸೆಕ್ಷನ್ 182/195 ನ್ನು ಪ್ರಶ್ನಿಸುವುದೇ ಅಲ್ಲದೆ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕುಗ್ಗಿಸುತ್ತದೆ ಎಂದು ಹೇಳಿದ್ದಾರೆ.
ಭಾರತದ ವನ್ಯಜೀವಿ ಸಂರಕ್ಷಣೆ ಸಂಸ್ಥೆಯ ನಿರ್ದೇಶಕಿ ಪ್ರಕೃತಿ ಶ್ರೀವಾತ್ಸವ ಮಾತನಾಡಿ, ಇಂತಹ ಕಠಿಣ ಪರಿಸ್ಥಿತಿಗಳಲ್ಲಿ ಅರಣ್ಯಾಧಿಕಾರಿಗಳು ಎದುರಿಸಬೇಕಾದ ಸಂಕಷ್ಟಗಳು ನಮಗೆ ತಿಳಿದಿದೆ. ಹಲವು ಪ್ರಕರಣಗಳಲ್ಲಿ ಅಧಿಕಾರಿಗಳು ತಮ್ಮ ಪ್ರಾಣವನ್ನು ಪಣಕ್ಕಿಡಬೇಕಾಗುತ್ತದೆ. ದುರಾದೃಷ್ಟಕರ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳ ವಿರುದ್ದ ಎಫ್ಐಆರ್ ದಾಖಲಿಸಿರುವುದು ಬೇಸರವನ್ನು ತಂದಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos