ಬೆಂಗಳೂರು: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಬಹುತೇಕ ಎಲ್ಲಾ ಜಲಾಶಯಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಮುಖ್ಯಮಂತ್ರಿ ಎಚ್ .ಡಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ನೀರು ಬಿಡಬೇಕೋ ಅಷ್ಟು ನೀರನ್ನು ಬಿಡಿ ಎಂದು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈಗಾಗಲೇ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು, ರಾಮನಗರ ಹಾಗೂ ಮಂಡ್ಯದಿಂದ ಸಾಕಷ್ಟು ನೀರು ತಮಿಳುನಾಡಿಗೆ ಹರಿದುಹೋಗುತ್ತದೆ. ಇದರ ಜೊತೆಗೆ ಜಲಾಶಯದಿಂದಲೂ ಅಲ್ಪ ಪ್ರಮಾಣದ ನೀರು ತಮಿಳುನಾಡಿಗೆ ಹರಿಯಬಿಟ್ಟರೆ ಜುಲೈ ತಿಂಗಳಲ್ಲಿ ಬಿಡಬೇಕಾದ ನೀರಿನ ಪ್ರಮಾಣ ಸರಿಯಾಗುತ್ತದೆ. ಹೀಗಾಗಿ ಜುಲೈ ತಿಂಗಳಲ್ಲಿ ಬಿಡಬೇಕಾದ ನೀರನ್ನು ಬಿಡಬೇಕೆಂದು ಸಿಎಂ ಸೂಚಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಅನ್ವಯ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ಬಳಿಕ ಜುಲೈ 7 ರಂದು ನವದೆಹಲಿಯಲ್ಲಿ ಮೊದಲ ಸಭೆ ನಡೆಸಲಾಯಿತು. ತಿಂಗಳುವಾರು ಹಂಚಿಕೆ ಪೈಕಿ ಜುಲೈ ನಲ್ಲಿ 34 ಟಿಎಂಸಿ ನೀರನ್ನು ಕರ್ನಾಟಕ ಹರಿಸಬೇಕು ಎಂದು ಹೇಳಲಾಗಿತ್ತು.