ರೂ.200 ಕೋಟಿ ದೇಣಿಗೆ; ಒಡಂಬಡಿಕೆ ಪತ್ರಕ್ಕೆ ಇನ್ಫೋಸಿಸ್-ಮೆಟ್ರೋ ಸಹಿ
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದಲ್ಲಿರುವ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣ ಕಾಮಗಾರಿ ಕೈಗೊಳ್ಳಲು ರೂ.200 ಕೋಟಿ ದೇಣಿಗೆ ನೀಡುವ ಸಂಬಂಧ ಇನ್ಫೋಸಿಸ್ ಪ್ರತಿಷ್ಠಾನ ಮತ್ತು ಬಿಎಂಆರ್'ಸಿಎಂಲ್ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿತು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಹಾಗೂ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಒಡಂಬಜಡಿಕೆ ಪತ್ರಕ್ಕೆ ಸಹಿ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಕೆ.ಜೆ. ಜಾರ್ಜ್, ಜಯಮಾಲಾ, ಜಮೀರ್ ಅಹಮದ್ ಖಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇನ್ಫೋಸಿಸ್ ಫೌಂಡೇಶನ್ 2ನೇ ಹಂತದ ಮೆಟ್ರೋ ಕಾಮಗಾರಿಗೆ ರೂ.100 ಕೋಟಿ ದೇಮಿಗೆ ಮತ್ತು ಕೋನಪ್ಪನ ಅಗ್ರಹಾರದಲ್ಲಿ ಅಂತರಾಷ್ಟ್ರೀಯ ಮಟ್ಟದ ಮೆಟ್ರೋ ನಿಲ್ದಾಣ ನಿರ್ಮಾಣ ಹಾಗೂ 30 ವರ್ಷಗಳ ನಿರ್ವಹಣೆಗಾಗಿ ಸುಮಾರು ರೂ.100 ಕೋಟಿ ಖರ್ಚು ಮಾಡಲಿದೆ. ಅದಕ್ಕಾಗಿಯೇ ಮೆಟ್ರೋ ನಿಮಗ ಮತ್ತು ಇನ್ಫೋಸಿಸ್ ಫೌಂಡೇಷನ್ ಒಡಂಬಡಿಕೆ ಮಾಡಿಕೊಂಡಿದೆ.
ಇನ್ಪೋಸಿಸ್ ನೀಡಿರುವ ದೇಣಿಗೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು, ನಮಮ ಮೆಟ್ರೋ ಬೆಂಗಳೂರು ಅತ್ಯಾವಶ್ಯಕವಾಗಿದೆ. ಮೊದಲ ಹಂತದಲ್ಲಿ 47 ಕಿ.ಮೀ ಮೆಟ್ರೋ ರೈಲು ಮಾರ್ಗದ ಕಾರ್ಯ ಪೂರೈಸಿದೆ. ಇದೀಗ 2ನೇ ಹಂತದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಯೋಜನೆಗೆ ಇನ್ಫೋಸಿಸ್ ಪ್ರತಿಷ್ಠಾನ ಕೈಜೋಡಿಸಿರುವುದು ಶ್ಲಾಘನೀಯ. ಕೋನಪ್ಪನ ಅಗ್ರಹಾರದ ಮೆಟ್ರೋ ನಿಲ್ದಾಣವನ್ನು ಅತ್ಯಾಧುನಿಕವಾಗಿ ನಿರ್ಮಿಸಿ, ಮುಂದಿನ 30 ವರ್ಷಗಳ ಕಾಲ ಅದರ ನಿರ್ವಹಣೆಯನ್ನು ಇನ್ಫೋಸಿಸ್ ಪ್ರತಿಷ್ಠಾನ ನೋಡಿಕೊಳ್ಳಲಿದೆ ಎಂದು ಹೇಳಿದರು.
ಇನ್ಫೋಸಿಸ್ ವಿಶ್ವಮಟ್ಟದಲ್ಲಿ ಸಾಧನೆ ಮಾಡಿದ್ದು, ಸಂಸ್ಥೆಯು ಲಾಭದಲ್ಲಿ ಒಂದು ಭಾಗವನ್ನು ಸಾಮಾಜಿಕ ಕಾರ್ಯಕ್ಕೆ ಬಳಕೆ ಮಾಡುತ್ತಿದೆ. ರಾಜ್ಯದ ಕ್ಯಾನ್ಸರ್ ಸಂಸ್ಥೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಸಂಸ್ಥೆ ಕೈ ಜೋಡಿಸಿದೆ. ರಾಜ್ಯದ ಅಭಿವೃದ್ಧಿಯಲ್ಲಿ ಇನ್ಫೋಸಿಸ್ ಸಂಸ್ಥೆ ಅನೇಕ ಕೊಡುಗೆ ನೀಡುತ್ತಿದ್ದು, ಅದನ್ನು ಸದ್ಭಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅವರು ಮುಂದಿಟ್ಟಿರುವ ಹೆಜ್ಜೆ ಇಡೀ ದೇಶಕ್ಕೆ ಮಾದರಿಯಾಗಲಿದೆ. 2ನೇ ಹಂತದ ಮೆಟ್ರೋ ಪೂರ್ಣಗೊಂಡರೆ ಪ್ರತಿನಿತ್ಯ 25 ರಿಂದ 30 ಲಕ್ಷ ಜನರು ಮೆಟ್ರೋ ರೈಲಿನಲ್ಲಿ ಸಂಚರಿಸಬಹುದು. ಮೆಟ್ರೋ 2ನೇ ಹಂತದ ಬೆಳವಣಿಗೆಯ ಹಾದಿಯಲ್ಲಿ ನಾವು ಭಾಗಿಯಾಗುತ್ತೇವೆ ಎಂದು ಇನ್ಫೋಸಿಸ್ ಫೌಂಡೇಶನ್ ಮುಂದೆ ಬಂದಿದೆ. ಅದಕ್ಕಾಗಿ ಸುಧಾಮೂರ್ತಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಇನ್ನಷ್ಟು ಟ್ರಸ್ಟ್ ಗಳು ಹೀಗೆ ಸರ್ಕಾರದ ಜೊತೆಗೆ ಕೈಜೋಡಿಸಿದರೆ, ಇನ್ನಷ್ಟು ಒಳ್ಳೆಯ ಕೆಲಸಗಳು ಸಾಧ್ಯವಾಗಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos