ಬೆಂಗಳೂರು; ನಗರದ ಯುಬಿ ಸಿಟಿಯ ಫರ್ಜಿಕೆಫೆಯಲ್ಲಿ ಉದ್ಯಮಿ ಪುತ್ರ ವಿದ್ವತ್ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಅವರು ಜಾಮೀನು ಕೋರಿ 2ನೇ ಬಾರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ನಲಪಾಡ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ ಬುಧವಾರ ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ವಿಚಾರಣೆಗೆ ಹಾಜರಾದ ಸಿಸಿಬಿ ಪೊಲೀಸರ ಪರ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ಯಾಮ್ ಸುಂದರ್ ನೋಟಿಸ್ ಸ್ವೀಕರಿಸಿದರು.
ನಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಶ್ಯಾಮ್ ಸುಂದರ್ ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಒಪ್ಪಿ ಆಕ್ಷೇಪಣೆ ಸಲ್ಲಿಸಲು ಜೂನ್11ರವರೆಗೆ ಕಾಲಾವಕಾಶ ನೀಡಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಜೂನ್11ಕ್ಕೆ ಮುಂದೂಡಿತು.
ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಇತ್ತೀಚೆಗಷ್ಟೇ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರಿಂದ ಜಾಮೀನು ಕೋರಿ ನಲಪಾಡ್ ಅಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮೇ.30 ರಂದು ಅಧೀನ ನ್ಯಾಯಾಲಯವು ತಿರಸ್ಕರಿಸಿ ಜಾಮೀನು ನಿರಾಕರಿಸಿತ್ತು. ಹೀಗಾಗಿ ಹೈಕೋರ್ಟ್'ಗೆ ನಲಪಾಡ್ ಅರ್ಜಿ ಸಲ್ಲಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಜಾಮೀನು ಕೋರಿ ಈ ಹಿಂದೆ ನಲಪಾಡ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಾರ್ಚ್ 14ರಂದು ವಜಾಗೊಳಿಸಿತ್ತು.