ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಹೇಳಿದ್ದಾರೆ.
ನಿನ್ನೆಯಷ್ಟೇ ಕುಮಾರಸ್ವಾಮಿಯವರು ಪ್ರಧಾನಿ ಮೋದಿ ಹಾಗೂ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ರಾಜಧಾನಿ ದೆಹಲಿಯಲ್ಲಿ ಉಭಯ ನಾಯಕರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಗೆಜೆಟ್ ನಲ್ಲಿನ ಲೋಪಗಳನ್ನು ಸರಿಪಡಿಸುವಂತೆ ಮನವಿ ಮಾಡಿಕೊದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದನೆ ನೀಡಿರುವ ಮೋದಿಯವರು, ಮತ್ತೊಮ್ಮೆ ಸಭೆ ಕರೆದು ಚರ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಉಭಯ ನಾಯಕರನ್ನು ಭೇಟಿ ಮಾಡಿದ ಬಳಿಗ ಸುದ್ದಿಗಾರರೊಂದಿಗೆ ಮಾತನಾಡಿರುವ ಕುಮಾರಸ್ವಾಮಿಯವರು, ತಮಿಳುನಾಡು, ಕೇರಳ ಮತ್ತು ಪಾಂಡಿಚೆರಿ ರಾಜ್ಯಗಳೊಂದಿಗೆ ಕಾವೇರಿ ನದಿ ನೀರು ಹಂಚಿಕೊಳ್ಳುವ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ತಲೆ ಬಾಗುತ್ತೇವೆ. ರಾಜ್ಯದಲ್ಲಿ ಸಂಗ್ರಹವಾಗುವ ನೀರಿನ ಪ್ರಮಾಣವನ್ನು 10 ದಿನಗಳಿಗೊಮ್ಮೆ ಅಳತೆ ಮಾಡುವುದು, ರಾಜ್ಯದ ರೈತರು ಯಾವ ಬೆಳೆ ಬೆಳೆಯಬೇಕು ಅಥವಾ ಇಂತಹದ್ದೇ ಬೆಳೆ ಬೆಳೆಯಬೇಕು ಎಂಬ ನಿರ್ಧಾರವನ್ನು ಮಂಡಳಿ ಕೈಗೊಳ್ಳುವುದು ಅವೈಜ್ಞಾನಿಕವಾಗಿದೆ. ಲೋಪದೋಷಗಳ ಅಂಶಗಳನ್ನು ಪ್ರಧಾನಿ ಮೋದಿಯವರಿಗೆ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.
ಇಂತಹದ್ದೇ ಬೆಳೆ ಬೆಳೆಯುವಂತೆ ರೈತರಿಕೆ ಸೂಚನೆ ನೀಡಿ ಮನವೊಲಿಕೆ ಮಾಡುವುದು ಕಷ್ಟಕರ ಕೆಲಸ. ಯಾವ ಪ್ರಮಾಣದಲ್ಲಿ ಮತ್ತು ಯಾವ ರೀತಿಯಲ್ಲಿ ನೀರು ಬಳಕೆ ಮಾಡಬೇಕು ಎಂಬ ಷರತ್ತು ವಿಧಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆ ಅಪನಂಬಿಕೆಗೆ ದಾರಿ ಮಾಡಿಕೊಡುತ್ತದೆ. ಈ ಬಗ್ಗೆ ನಾಯಕರ ಗಮನ ಸೆಳೆಯಲಾಗಿದೆ. ಕರ್ನಾಟಕ ರಾಜ್ಯವು ತಮಿಳುನಾಡಿಗಿಂತ ಮೇಲ್ಭಾಗದಲ್ಲಿದೆ. ಹೀಗಾಗಿ ನೀರು ಬಿಡಬೇಕಾದ ಪರಿಸ್ಥಿತಿಯಲ್ಲಿದ್ದೇವೆ. ನಮಗೆ ಮಾರ್ಗಸೂಚಿಗಳನ್ನು ಹಾಕುವುದರ ಜೊತೆಗೆ ಷರತ್ತುಗಳನ್ನು ವಿಧಿಸಲಾಗಿದೆ. ಆದರೆ, ಮಳೆಯ ಕೊರತೆ ಎದುರಾದಾಗ ಕರ್ನಾಟಕದ ಪರಿಸ್ಥಿತಿ ಏನು? ಆ ವೇಳೆ ತಮಿಳುನಾಡು ಏನು ಮಾಡಬೇಕು ಎಂಬುದರ ಸ್ಪಷ್ಟನೆ ಇಲ್ಲ. ಅಲ್ಲದೇ, ಪ್ರಕೃತಿ ಸಹಕರಿಸಿ ತಮಿಳುನಾಡಿನಲ್ಲಿ ಮಳೆ ಹೆಚ್ಚಿನ ಪ್ರಮಾಣದಲ್ಲಾದರೆ, ಯಾವ ನಿಯಮ ಪಾಲನೆ ಮಾಡಬೇಕು ಎಂಬುದರ ಬಗ್ಗೆ ಸ್ಫಷ್ಟವಾಗಿ ಉಲ್ಲೇಖವಾಗಬೇಕಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos