ರಾಜ್ಯ

ಆದಾಯ ತೆರಿಗೆ ವಂಚನೆ: ಸಚಿವ ಡಿ ಕೆ ಶಿವಕುಮಾರ್ ಗೆ ಸಮನ್ಸ್ ಜಾರಿ

Sumana Upadhyaya

ಬೆಂಗಳೂರು: ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ವೈದ್ಯಕೀಯ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಡಿ ಕೆ ಶಿವಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಸಚಿವ ಡಿ ಕೆ ಶಿವಕುಮಾರ್ ಅವರು ಉದ್ದೇಶಪೂರ್ವಕವಾಗಿ ತೆರಿಗೆ ಪಾವತಿಸುವುದನ್ನು ತಪ್ಪಿಸಿದ್ದಾರೆ ಮತ್ತು ಆದಾಯ ತೆರಿಗೆ ಕಾಯ್ದೆಯಡಿ ತಪ್ಪು ದಾಖಲೆಗಳನ್ನು ನೀಡಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆಯ ಐಟಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯಡಿ ಸಲ್ಲಿಸಲಾಗಿದ್ದ ದೂರಿನ ಆಧಾರದ ಮೇಲೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಆಗಸ್ಟ್ 2ರೊಳಗೆ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಡಿ ಕೆ ಶಿವಕುಮಾರ್ ಅವರು ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದು, ಈ ಹಿಂದೆ ಅವರ ನಿವಾಸ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದ ಸಂದರ್ಭದಲ್ಲಿ ಅಘೋಷಿತ ಹಣ ಮತ್ತು ಸುಳ್ಳು ದಾಖಲೆಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು.

ವಿಶೇಷ ನ್ಯಾಯಾಲಯ ಇತರ ನಾಲ್ವರ ವಿರುದ್ಧ ಕೂಡ ಕೇಸು ದಾಖಲಿಸಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಅವರು ಬೆಂಗಳೂರಿನ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮ ಹಾಗೂ ದೆಹಲಿಯ ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಎನ್ ಎಂಬುವವರಾಗಿದ್ದಾರೆ. ಅವರನ್ನು ಕೂಡ ಆಗಸ್ಟ್ 2ರೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ಸಚಿವ ಡಿಕೆಶಿ ವಿರುದ್ಧ ಆದಾಯ ತೆರಿಗೆ ಇಲಾಖೆ ದಾಖಲಿಸಿದ ನಾಲ್ಕನೇ ಪ್ರಕರಣ ಇದಾಗಿದೆ.

SCROLL FOR NEXT