2018 ಕೇಂದ್ರ ಸಾಹಿತ್ಯ ಅಕಾಡಮಿ ಬಾಲ ಸಾಹಿತ್ಯ ಪುರಸ್ಕಾರಕ್ಕೆ ಖ್ಯಾತ ಸಾಹಿತಿ ಕಂಚ್ಯಾಣಿ ಶರಣಪ್ಪ ಆಯ್ಕೆ
ವಿಜಯಪುರ: ಖ್ಯಾತ ಸಾಹಿತಿ ವಿಜಯಪುರ ಮೂಲದ ಕಂಚ್ಯಾಣಿ ಶರಣಪ್ಪ2018ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡಮಿ ಬಾಲ ಸಾಹಿತ್ಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡಮಿ ಈ ಸಾಲಿನ ಬಾಲ ಸಾಹಿತ್ಯ ಪುರಸ್ಕಾರ ಹಾಗೂ ಯುವ ಪುರಸ್ಕಾರಗಳ ಘೋಷಣೆ ಮಾಡಿದ್ದು ಕನ್ನಡದ ಯುವ ಬರಹಗಾರ ಪದ್ಮನಾಭ ಭಟ್ ಅವರಿಗೆ ಯುವ ಬರಹಗಾರರ ಪ್ರಶಸ್ತಿ ಲಭಿಸಿದೆ.
ಕನ್ನಡ ಸೇರಿ 23 ಬಾಷೆಗಳ ಸಾಹಿತಿಗಳನ್ನು ಯುವ ಹಾಗೂ ಬಾಲ ಸಾಹಿತ್ಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಯುವ ಪುರಸ್ಕಾರ ಹಾಗೂ ಬಾಲ ಸಾಹಿತ್ಯ ಪ್ರಶಸ್ತಿಗಳು ತಲಾ 50 ಸಾವಿರ ನಗದು ಹಾಗೂ ತಾಮ್ರ ಫಲಕವನ್ನು ಹೊಂದಿರಲಿದೆ.
ಮಕ್ಕಳ ಸಾಹಿತ್ಯಕ್ಕೆ ಕಂಚ್ಯಾಣಿ ಶರಣಪ್ಪ ನೀಡಿರುವ ಸಮಗ್ರ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 14ರ ‘ಮಕ್ಕಳ ದಿನಾಚರಣೆ’ಯಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ನೆರವೇರಲಿದೆ ಎಂದು ಅಕಾಡಮಿ ಪ್ರಕಟಣೆ ತಿಳಿಸಿದೆ.
ಕಂಚ್ಯಾಣಿ ಶರಣಪ್ಪ ಕಿರು ಪರಿಚಯ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಸರೂರದಲ್ಲಿ 03.01.1930 ರಂದು ಜನಿಸಿದ ಕಂಚ್ಯಾಣಿ ಶರಣಪ್ಪ ಶಿವಸಂಗಪ್ಪ ಪ್ರಾಥಮಿಕ ಶಾಲಾ ಶಿಕ್ಷಕರಾಗಿ 39 ವರ್ಷಗಳ ದೀರ್ಘ ಕಾಲದ ಬೋಧನೆಯಲ್ಲಿ ನಿರತರಾಗಿದ್ದು 1988 ರಲ್ಲಿ ನಿವೃತ್ತಿ. ಹೊಂದಿದರು. ಮಕ್ಕಳ ಮನೋಧರ್ಮವನ್ನರಿತು, ಅವರ ಮನೋವಿಕಾಸಕ್ಕೆ ತಕ್ಕಂತಹ ರಮ್ಯವಾದ ಪದಗಳನ್ನು ರಚಿಸಿ, ಹಾಡುತ್ತ, ಕುಣಿಯುತ್ತ, ಕಲಿಯುವಂತಾಗುವಂತಹ ಗೀತೆಗಳ ರಚಿಸಿರುವ ಇವರು ಗ್ರಾಮೀಣ ಪ್ರತಿಭಾ ಪ್ರಕಾಶನ’ ಎನ್ನುವ ಸ್ವಂತ ಪ್ರಕಾಶನ ಸಂಸ್ಥೆಯನ್ನೂ ಸ್ಥಾಪಿಸಿದ್ದರು.
‘ಅಜ್ಜನ ಹಾಡು’. ಇವರ ಮೊದಲ ಮಕ್ಕಳ ಕವಿತಾ ಸಂಕಲನವಾಗಿದ್ದು ಜಾಗೃತ ಭಾರತ, ಮಕ್ಕಳ ಮನೆ, ಹುಟ್ಟು ಹಬ್ಬ, ತಮ್ಮನ ಶಾಲೆ, ತೋಟದ ಆಟ, ಚೆಲುವಿನ ಚಿಟ್ಟೆ, ಪುಟ್ಟಿಯ ತೋಟ, ಬೆದರು ಬೆಚ್ಚ ಮುಂತಾದವುಗಳ ಜೊತೆಗೆ ‘ಗುಡು ಗುಡು ಗುಂಡ’ ಎಂಬ ಶಿಶು ಪ್ರಾಸದ ಪುಸ್ತಕವನ್ನು ರಚಿಸಿದ್ದಾರೆ.
ಇವರ ಇತರ ಕೃತಿಗಳೆಂದರೆ ಕನ್ನಡ ಕಣ ಕೀರ್ತಿ (ಗದ್ಯ ಚರಿತ್ರೆ), ಬಸವ ಪ್ರದೀಪ (ಖಂಡ ಕಾವ್ಯ) ಮತ್ತು ಸಮಗ್ರ ಕವಿತೆಗಳ ಸಂಗ್ರಹ. ಆಯ್ದ ನೂರೊಂದು ಕವಿತೆಗಳು.
ಇದೀಗ ಕೇಂದ್ರ ಸಾಹಿತ್ಯ ಅಕಾಡಮಿ ಗೌರವ ಪಡೆದಿರುವ ಶರಣಪ್ಪ ಅವರಿಗೆ ಇದಕ್ಕೂ ಮುನ್ನ ಅನೇಕ ಪ್ರಶಸ್ತಿ, ಪುರಸ್ಕಾರಗಳು ಲಭಿಸಿದೆ. ಅವುಗಳೆಂದರೆ- ‘ಜಾಗೃತ ಭಾರತ’ ಪುಸ್ತಕಕ್ಕೆ ಕರ್ನಾಟಕ ಸಾಹಿತ್ಯ ಅಕಾಡಮಿ ಪುಸ್ತಕ ಬಹುಮಾನ,‘ಅಜ್ಜನ ಹಾಡು’ ಪುಸ್ತಕಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ವಸುದೇವ ಭೂಪಾಳಂ ಪ್ರಶಸ್ತಿ, ಧಾರವಾಡದ ಮಕ್ಕಳ ಮನೆ ಮಕ್ಕಳ ಸಾಹಿತ್ಯ ಪ್ರಶಸ್ತಿ, ರಾಷ್ಟ್ರೀಯ ಬಾಲ ಸಾಹಿತ್ಯ ಪುರಸ್ಕಾರ , ‘ಗಿಲ್ ಗಿಲ್ ಗಿಡ್ಡ’ ಪುಸ್ತಕಕ್ಕೆ ಅತ್ತಿಮಬ್ಬೆ ಪ್ರತಿಷ್ಠಾನದ ರನ್ನ ಸಾಹಿತ್ಯ ಪ್ರಶಸ್ತಿ.
ಹುಬ್ಬಳ್ಳಿಯ ಮೂರು ಸಾವಿರ ಮಠ ಸಾಹಿತ್ಯ ಪುರಸ್ಕಾರ, ಭಾಲ್ಕಿ ಸಂಸ್ಥಾನ ಮಠದ ಮಕ್ಕಳ ಸಾಹಿತ್ಯ ಪುರಸ್ಕಾರ, ಶಿವಮೊಗ್ಗ ಕರ್ನಾಟಕ ಸಂಘದ ಮಕ್ಕಳ ಸಾಹಿತ್ಯ ಪ್ರಶಸ್ತಿ, ಬೆಳಗಾವಿ ನಾಗನೂರ ರುದ್ರಾಕ್ಷಿ ಮಠದ ಹರ್ಡೇಕರ್ಮಂಜಪ್ಪ ಮಕ್ಕಳ ಸಾಹಿತ್ಯ ಪ್ರಶಸ್ತಿಗಳ ಜೊತೆಗೆ ಬಾಗಲಕೋಟೆಯಲ್ಲಿ ನಡೆದ ಬಿಜಾಪುರ ಜಿಲ್ಲಾ ೫ನೆಯ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಬಿಜಾಪುರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ ಮುಂತಾದ ಗೌರವಗಳಿಗೆ ಪಾತ್ರರಾಗಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos