ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ರಾಜ್ಯ ಸರ್ಕಾರದ ವಿರೋಧ
ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ರಾಜ್ಯ ಸರ್ಕಾರ ತನ್ನ ವಿರೋಧ ವ್ಯಕ್ತ ಪಡಿಸಿದೆ, ಆದರೆ ಅಂತರಾರಾಜ್ಯ ನದಿ ವಿವಾದ ಸಂಬಂಧ ಸರ್ವೋಚ್ಛ ನ್ಯಾಯಾಲಯ ನೀಡಿರುವ ಇತರ ಕಾರ್ಯವಿಧಾನಗಳ ಅನುಷ್ಠಾನಕ್ಕೆ ರಾಜ್ಯ ಬದ್ದವಾಗಿದೆ ಎಂದು ಹೇಳಿದೆ.
ಇತ್ತೀಚೆಗೆ ನಡೆದ ಮುಖ್ಯ ಕಾರ್ಯದರ್ಶಿಗಳ ಸಭೆಯಲ್ಲಿ ರಾಜ್ಯದ ನಿಲುವನ್ನು ಕೇಂದ್ರ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ,
ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ನಮ್ಮ ವಿರೋಧವಿದೆ, ಆದರೆ ಉಳಿದ ಸೂಚನೆಗಳನ್ನು ಅನುಷ್ಠಾನಕ್ಕೆ ತರಲು ನಾವು ಸಿದ್ದರಿದ್ದೇವೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನ ಪ್ರಭಾ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ವರದಿ ಸಲ್ಲಿಸಲು ಸೋಮವಾರದವರೆಗೂ ರಾಜ್ಯ ಸರ್ಕಾರ ಕಾಲವಕಾಶ ಕೋರಿದ್ದು ಸೋಮವಾರ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪನ್ನು ಆರು ವಾರಗಳಲ್ಲಿ ಅನುಷ್ಠಾನಗೊಳಿಸಬೇಕೆಂದು ಕೇಂದ್ರ ಜಲ ಸಂಪನ್ಮೂಲ ಇಲಾಖೆ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿತ್ತು. ತಮಿಳುನಾಡು ಪುದುಚೆರಿ ಮತ್ತು ಕೇರಳ ರಾಜ್ಯಗಳು ಕಾರ್ಯ ವಿಧಿ ವಿಧಾನಗಳ ಅನುಷ್ಠಾನಗೊಳಿಸಲು ಒಪ್ಪಿಕೊಂಡಿದ್ದವು, ಆದರೆ ಕರ್ನಾಟಕ ನಿರ್ವಹಣಾ ಮಂಡಳಿ ರಚನೆಗೆ ವಿರೋಧ ವ್ಯಕ್ತ ಪಡಿಸಿದೆ. ಕಾವೇರಿ ಜಲಾನಯನ ಪ್ರದೇಶಗಳ ಮೇಲೆ ಕರ್ನಾಟಕ್ಕೆ ನಿಯಂತ್ರಣವಿರುವುದಿಲ್ಲ, ಹೀಗಾಗಿ ಮಂಡಳಿ ರಚನೆಗೆ ಸಿಎಂ ಸಿದ್ದರಾಮಯ್ಯ ಕೂಡ ವಿರೋಧ ವ್ಯಕ್ತ ಪಡಿಸಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ ನಿರ್ವಹಣಾ ಮಂಡಳಿ ರಚನೆ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ನಿರ್ಧರಿಸಲಾಯಿತು.
ಫೆಬ್ರವರಿ 16ರಂದು ಪ್ರಕಟವಾದ ತೀರ್ಪಿನಂತೆ ಆರು ವಾರಗಳ ಒಳಗೆ ಕೇಂದ್ರ ಸರಕಾರ ಕ್ರಮವನ್ನು ಕೈಗೊಳ್ಳಬೇಕಾಗಿದ್ದು, ಅದರ ಬಗ್ಗೆ ಚರ್ಚಿಸಲು ಶುಕ್ರವಾರ ಜಲಸಂಪನ್ಮೂಲ ಸಚಿವಾಲಯ ಕರ್ನಾಟಕ, ತಮಿಳುನಾಡು ಮತ್ತು ಪುದುಚೆರಿಯ ಉನ್ನತಾಧಿಕಾರಿಗಳ ಸಭೆಯನ್ನು ಕರೆದಿತ್ತು. ಮಂಡಳಿ ಹೇಗಿರಬೇಕು, ಸದಸ್ಯರ ಕರ್ತವ್ಯ ಮತ್ತು ಜವಾಬ್ದಾರಿಗಳ ಸ್ವರೂಪದ ಬಗ್ಗೆ ಸಲಹೆಗಳನ್ನು ನೀಡುವಂತೆ ಸಭೆಯಲ್ಲಿ ಕೋರಲಾಯಿತು. ಜಲಸಂಪನ್ಮೂಲ ಖಾತೆ ಕಾರ್ಯದರ್ಶಿ ಯು.ಪಿ. ಸಿಂಗ್ ನೇತೃತ್ವದ ಸಭೆಯಲ್ಲಿ ಕರ್ನಾಟಕವನ್ನು ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಭಾಗವಹಿಸಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos