ಪುದುಚೆರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದ್ವಂದ್ವ ಮಾತುಗಳನ್ನಾಡುತ್ತಿದ್ದಾರೆಂದು ಪುದುಚೆರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿಯವರು ಮಂಗಳವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಈ ಕುರಿತಂತೆ ಮಂಗಳೂರಿನಲ್ಲಿ ವರದಿಗಾರರೊಂದಿಗೆ ಮಾತನಾಡಿರುವ ಅವರು, ಒಂದೆಡೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ. ನಾನು ಭ್ರಷ್ಟಾಚಾರದಲ್ಲಿ ತೊಡಗುವುದಿಲ್ಲ. ಇತರರನ್ನೂ ತೊಡಗಲು ಬಿಡುವುದಿಲ್ಲ ಎಂದು ಹೇಳುತ್ತಾರೆ. ಮತ್ತೊಂದೆಡೆ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದ ಬಿ.ಎಸ್.ಯಡಿಯೂರಪ್ಪ ಅವರನ್ನು ರಕ್ಷಣೆ ಮಾಡುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ಕರ್ನಾಟಕದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಣೆ ಮಾಡಿದ್ದಾರೆಂದು ಕಿಡಿಕಾರಿದ್ದಾರೆ.
ಚುನಾವಣೆಯಲ್ಲಿ ಗೆಲವು ಸಾಧಿಸಲು ಅಕ್ರಮ ಗಣಿಗಾರಿಕೆಯಲ್ಲಿ ಆರೋಪಿಯಾಗಿರುವ ಜನಾರ್ಧನ ರೆಡ್ಡಿಯವರ ಸಹಾಯವನ್ನು ಬಿಜೆಪಿ ಪಡೆದುಕೊಳ್ಳುತ್ತಿದೆ. ಮೋದಿಯವರು ಜನರಿಗೆ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ದೇಶಕ್ಕೆ ಮೋದಿ ಮೋಸ ಮಾಡುತ್ತಿದ್ದಾರೆ. ಬಿಜೆಪಿ ಹಾಗೂ ಆರ್'ಎಸ್ಎಸ್ ನಾಯಕರು ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಹೊಸ ಹೆಸರುಗಳನ್ನು ನೀಡಿ, ಹೊಸ ಯೋಜನೆಯೆಂಬಂತೆ ಜಾರಿ ಮಾಡಿದರು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಮಾತನಾಡಿ, ಜನರ ಬೆನ್ನಿಗೆ ಚೂರಿ ಹಾಕಿದ್ದಕ್ಕಾಗಿ ಚುನಾವಣಾ ಪ್ರಚಾರದ ಬದಲು, ಮೋದಿಯವರು ಕ್ಷಮಾಪಣಾ ಪ್ರಚಾರ ನಡೆಸಬೇಕು ಎಂದಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos