ಬೆಂಗಳೂರು: ಆಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣದ ಆರೋಪಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ಅವರನ್ನು 1ನೇ ಎಸಿಎಂಎಂ ಕೋರ್ಟ್ 8 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಆಲಿಖಾನ್ ನನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ತಮ್ಮ ವಶಕ್ಕೆ ನೀಡವಂತೆ ಸಿಸಿಬಿ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್ ಆರೋಪಿ ಅಲಿಖಾನ್ ನನ್ನು 8 ದಿನಗಳ ಕಾಲ ಮಾತ್ರ ಸಿಸಿಬಿ ವಶಕ್ಕೆ ನೀಡಿದ್ದು, ಆರೋಪಿ ಮೇಲೆ ಯಾವುದೇ ದೌರ್ಜನ್ಯ ಎಸಗುವಂತಿಲ್ಲ ಮತ್ತು ವೈದ್ಯಕೀಯ ಚಿಕಿತ್ಸೆ ಕೊಡಿಸಬೇಕು ಎಂದು ಸಿಸಿಬಿ ಅಧಿಕಾರಿಗಳಿಗೆ ಸೂಚಿಸಿದೆ.
ಅಲಿಖಾನ್ ಪರ ವಕೀಲರು ಕೋರ್ಟ್ನಲ್ಲಿ ವಾದ ಮಂಡನೆ ಮಾಡಿ ಅಲಿಖಾನ್ಗೆ ಪೊಲೀಸರು ಹಿಂಸೆ ನೀಡುತ್ತಿದ್ದಾರೆ. ವಕೀಲರ ಭೇಟಿಗೂ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.
ಆಂಬಿಡೆಂಟ್ ಕಂಪನಿ ಮೂಲಕ 57 ಕೆಜಿ ಚಿನ್ನದ ಗಟ್ಟಿಯನ್ನು ಹಣಕ್ಕೆ ಬದಲಿಸಿರುವ ಆರೋಪ ಎದುರಿಸುತ್ತಿರು ಅಲಿಖಾನ್ ಕಳೆದ ಮಂಗಳವಾರ ತನ್ನ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ 1ನೇ ಎಸಿಎಂಎಂ ಕೋರ್ಟ್ ಗೆ ಶರಣಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಅಲಿಖಾನ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.