ಬೆಂಗಳೂರು: ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಮೊಬೈಲ್ ತರುವಂತಿಲ್ಲ ಎಂದು ಇತ್ತೀಚೆಗಷ್ಟೇ ಪದವಿ ಪೂರ್ವ ಕಾಲೇಜು ಶಿಕ್ಷಣ ಮಂಡಳಿ ಶಾಕ್ ನೀಡಿತ್ತು. ಇದೀಗ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಶೀಘ್ರದಲ್ಲಿಯೇ ಸಿಹಿಸುದ್ದಿಯೊಂದನ್ನು ನೀಡಲು ಸಿದ್ಧತೆಗಳನ್ನು ನಡೆಸುತ್ತಿದೆ.
ಮಣಭಾರ ತೂಕವಿರುವ ಬ್ಯಾಗ್ ಗಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಮಕ್ಕಳ ಬ್ಯಾಗ್ ಗಳ ಭಾರವನ್ನು ಇಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.
ಶಾಲಾ ಮಕ್ಕಳ ಬ್ಯಾಗ್'ಗಳ ತೂಕಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಈಗಾಗಲೇ ರಾಜ್ಯ ಸರ್ಕಾರಗಳಿಗೆ ಸುತ್ತೋಲೆಯನ್ನು ಹೊರಡಿಸಿದ್ದು, ಸುತ್ತೋಲೆಯಲ್ಲಿ ಮಾರ್ಗಸೂಚಿಗಳನ್ನು ನೀಡಿದೆ. ಅಲ್ಲದೆ, ಈ ಕುರಿತು ವರದಿಗಳನ್ನು ಸಲ್ಲಿಸುವಂತೆಯೂ ಸೂಚನೆ ನೀಡಿದೆ.
ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಪಾಲನೆ ಮಾಡಲು ರಾಜ್ಯ ಸರ್ಕಾರ ಕೂಡ ಚಿಂತನೆ ನಡೆಸಿದ್ದು, ಮಾರ್ಗಸೂಚಿಗಳನ್ನು ಪಾಲನೆ ಮಾಡಲು ಮುಂದಾಗಿದೆ. ಖಾಸಗಿ ಹಾಗೂ ಸರ್ಕಾರಿ ಅನುದಾನಿತ, ಸರ್ಕಾರಿ ಶಾಲೆಗಳು ಮಾರ್ಗಸೂಚಿಗಳನ್ನು ಪಾಲನೆ ಮಾಡಲು ಶೀಘ್ರದಲ್ಲಿಯೇ ಆದೇಶ ಹೊರಡಿಸಲು ಸಜ್ಜಾಗಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಪಿ.ಸಿ.ಜಫ್ಫರ್ ಅವರು, ಈ ಬಗ್ಗೆ ನಾವು ಈಗಾಗಲೇ ಅಧ್ಯಯನವನ್ನು ನಡೆಸುತ್ತಿದ್ದೇವೆ. ಶಾಲಾ ಆಡಳಿತ ಮಂಡಳಿಗಳೊಂದಿಗೆ ಚರ್ಚೆಗಳನ್ನು ನಡೆಸಿದ್ದೇವೆ. ಶೀಘ್ರದಲ್ಲಿಯೇ ಮಾರ್ಗದರ್ಶನಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.