ಬೆಂಗಳೂರು: ಆಂಬಿಡೆಂಟ್ ಕಂಪೆನಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸೆಂಬರ್ 4ರವರೆಗೆ ಪೊಲೀಸರು ಡಿಸೆಂಬರ್ 4ರವರೆಗೆ ವಿಚಾರಣೆ ನಡೆಸಬಾರದೆಂದು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನಿಂದ ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ ಅವರಿಗೆ ನಿರಾಳತೆ ಸಿಕ್ಕಂತಾಗಿದೆ.
ನ್ಯಾಯಮೂರ್ತಿಗಳಾದ ಪಿ ಎಸ್ ದಿನೇಶ್ ಕುಮಾರ್ ನಿನ್ನೆ ಮಧ್ಯಂತರ ಆದೇಶ ಹೊರಡಿಸಿದ್ದು, ಜನಾರ್ದನ ರೆಡ್ಡಿ ಮತ್ತು ಆಂಧ್ರ ಪ್ರದೇಶದ ಆಲಿ ಖಾನ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ. ಆಲಿ ಖಾನ್ ಪ್ರಕರಣದಲ್ಲಿ ಪೊಲೀಸ್ ಕಸ್ಡಡಿ ಮುಗಿದ ನಂತರವೇ ಮಧ್ಯಂತರ ಆದೇಶ ಜಾರಿಗೆ ಬರಲಿದೆ.
ವಿಚಾರಣೆ ವೇಳೆ ಜನಾರ್ದನ ರೆಡ್ಡಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ ವಿ ನಾಗೇಶ್, ಈ ಪ್ರಕರಣದಲ್ಲಿ ಅರ್ಜಿದಾರರು ಚಿಟ್ ಫಂಡ್ ಕಾಯ್ದೆ ಉಲ್ಲಂಘನೆ ಆರೋಪಕ್ಕೆ ಒಳಪಡುವುದಿಲ್ಲ. ಪೊಲೀಸರು ದುರುದ್ದೇಶದಿಂದ ಸಿಲುಕಿಸಿದ್ದಾರೆ. ಆದ್ದರಿಂದ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿತು. ಅಲ್ಲಿಯವರೆಗೂ ಕ್ರಮಕ್ಕೆ ಮುಂದಾಗಬಾರದು ಎಂದು ಸಿಸಿಬಿ ಪೊಲೀಸರಿಗೆ ನಿರ್ದೇಶಿಸಿತು.