ಮೈಸೂರು: ಐತಿಹಾಸಿಕ ಮೈಸೂರು ದಸಾರ ಉತ್ಸವದ ಕೊನೆಯ ದಿನವಾದ ಶುಕ್ರವಾರ ವಿಜಯದಶಮಿಯ ಜಂಬೂ ಸವಾರಿ ಮುನ್ನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.
ಇಂದು ಮಧ್ಯಾಹ್ನ 2.30ರಿಂದ 3.16ಕ್ಕೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಬಲದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಸಿಎಂ ಕುಮಾರಸ್ವಾಮಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು. ಇನ್ನು ಕೆಲವೇ ನಿಮಿಷಗಳಲ್ಲಿ ಶುಭ ಕುಂಭ ಲಗ್ನದಲ್ಲಿ ಅರಮನೆ ಒಳಾವರಣದಲ್ಲಿ ದಸರಾ ಗಜಪಡೆಯ ಕ್ಯಾಪ್ಟನ್ ಅರ್ಜುನ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.
ಜನಾಕರ್ಷಣೆಯ ಪಂಜಿನ ಕವಾಯತು ಇಂದು ರಾತ್ರಿ 7 ಗಂಟೆಗೆ ಬನ್ನಿ ಮಂಟಪ ಮೈದಾನದಲ್ಲಿ ಪಂಜಿನ ಕವಾಯತು ಆರಂಭವಾಗಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ, ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ಬಳಿಕ 2 ಗಂಟೆಗಳ ಕಾಲ ಮೈನವಿರೇಳಿಸುವ ಸಾಹಸ ಪ್ರದರ್ಶನ, ಬೈಕ್ ಸವಾರಿ, ಅಶ್ವಾರೋಹಿ ಪಡೆಗಳ ಸಾಹಸ ಪ್ರದರ್ಶನ ನಡೆಯಲಿದೆ.
ಜಂಬೂಸವಾರಿ ಮೆರವಣಿಗೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು 5 ಸಾವಿರದ 284 ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ. ಇದೇ ಮೊದಲ ಬಾರಿ ಮೊಬೈಲ್ ಕಮಾಂಡೋ ಭದ್ರತೆ ಒದಗಿಸಲಾಗಿದೆ.
ಈ ವರ್ಷ ಮೆರವಣಿಗೆಯಲ್ಲಿ 100 ಕಲಾತಂಡಗಳು, 42 ಮೆರವಣಿಗೆಯ ವೈಭವ ಹೆಚ್ಚಸಲಿರುವ ಸ್ತಬ್ಧ ಚಿತ್ರಗಳು, 12 ಅಂಬಾರಿ ಹೊತ್ತು ಸಾಗುವ ಅರ್ಜುನನನ್ನೊಳಗೊಂಡ ಗಜಪಡೆ, ಅರ್ಧ ಕಿಲೋ ಮೀಟರ್ ದೂರದ ಬನ್ನಿ ಮಂಟಪಕ್ಕೆ ಮೆರವಣಿಗೆ ಸಾಗಲಿದೆ.
ಇದಕ್ಕೂ ಮುನ್ನ ಮುಖ್ಯಮಂತ್ರಿ ಕುಮಾರಸ್ವಾಮಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಕೂಡ ಶ್ರೀಗಳಿಂದ ಆಶೀರ್ವಾದ ಪಡೆದರು.