ಬೆಳಗಾವಿ: ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಬಣ ಅವಿರೋಧವಾಗಿ ಆಯ್ಕೆಯಾಗಿದೆ.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಣದ ಅಧ್ಯಕ್ಷರಾಗಿ ಮಹಾದೇವ್ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬು ಸಾಹೇಬ್ ಜಮಾದಾರ್ ಆಯ್ಕೆಯಾಗಿದ್ದಾರೆ.
ಬೆಳಗಾವಿ ಪಿಎಲ್ಡಿ ಬ್ಯಾಂಕ್ಗೆ ಇಂದು ಚುನಾವಣೆ ನಿಗದಿಯಾಗಿತ್ತು. ಅದರಂತೆ ಬೆಳಗ್ಗೆ 10 ರಿಂದ 11 ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಬಣದವರಷ್ಟೇ ನಾಮಪತ್ರ ಸಲ್ಲಿಸಿದ್ದರು.
ಪ್ರತಿಷ್ಠೆಯ ಕಣವಾಗಿದ್ದ ಪಿಎಲ್ಡಿ ಬ್ಯಾಂಕ್ಗೆ ಹಿಂದಿನಿಂದಲೂ ಜಾರಕಿಹೊಳಿ ಬಣದವರೇ ಅವಿರೋಧವಾಗಿ ಆಯ್ಕೆಯಾಗುತ್ತಿದ್ದರು. ಆದರೆ ಈ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಬಣದವರು ಅವಿರೋಧ ಆಯ್ಕೆಯಾಗಿದ್ದಾರೆ.
ಬೆಳಗಾವಿ ಸಕ್ಕರೆ ಉದ್ಯಮ ಮತ್ತು ಸಹಕಾರ ಕ್ಷೇತ್ರದ ಮೇಲೆ ಜಾರಕಿಹೊಳಿ ಸಹೋದರರು ಪ್ರಬಲ ಹಿಡಿತ ಹೊಂದಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಂಧಾನದ ಬಳಿಕ ಜಾರಕಿಹೊಳಿ ಬಣದವರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ನಡೆಯಿತು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮೇಲುಗೈ ಸಾಧಿಸುವ ಮೂಲಕ ಜಾರಕಿಹೊಳಿ ಸಹೋದರರ ಅಬ್ಬರಕ್ಕೆ ಬ್ರೇಕ್ ಬಿದ್ದಂತಾಗಿದೆ.