ಬೆಂಗಳೂರು: ದೆಹಲಿಯ ನಿವಾಸಗಳ ಮೇಲೆ ಐಟಿ ದಾಳಿ ನಡೆದಿದ್ದ ಪ್ರಕರಣದಲ್ಲಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆಶ್ರಯ ನೀಡಿದ ಸಂದರ್ಭದಲ್ಲಿ ಶಿವಕುಮಾರ್ ಮತ್ತವರ ಆಪ್ತರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಈ ವೇಳೆ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ ಐಟಿ ಕಾಯ್ದೆ ಸೆಕ್ಷನ್ 277, 278, 193,199 ಹಾಗೂ 120 (ಬಿ) ಅಡಿಯಲ್ಲಿ ದೂರು ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಹಣಕಾಸು ವಹಿವಾಟಿಗೆ ಸಂಬಂಧಿಸಿದ ದಾಖಲೆಗಳನ್ನು ಹರಿದು ಹಾಕಿ, ಸಾಕ್ಷ್ಯ. ನಾಶಪಡಿಸಿದ ಆರೋಪವೂ ಸಚಿವರ ವಿರುದ್ಧ ದಾಖಲಾಗಿದೆ.
ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ ಇಬ್ಬರ ಶ್ಯೂರಿಟಿ, ತಲಾ 50 ಸಾವಿರ ಬಾಂಡ್ ಭದ್ರತೆ ನೀಡುವಂತೆ ಸೂಚನೆ ನೀಡಿದೆ. ಡಿ.ಕೆ ಶಿವಕುಮಾರ್ ಜೊತೆಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಸುನಿಲ್ ಶರ್ಮಾ ಆಂಜನೇಯ, ರಾಜೇಂದ್ರಗೂ ಜಾಮೀನು ಮಂಜೂರು ಮಾಡಲಾಗಿದೆ.