ರಾಜ್ಯ

ಆಪರೇಷನ್ ಕಮಲ 'ಕಿಂಗ್ ಪಿನ್' ಮನೆ ಮೇಲೆ ಪೊಲೀಸರ ದಾಳಿ; ದಾಖಲೆ ವಶ

Shilpa D
ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನಕ್ಕೆ ಸಂಚು ರೂಪಿಸಿ ಆಪರೇಷನ್ ಕಮಲದ ಕಿಂಗ್ ಪಿನ್ ಗಳ ಮನೆ ಮೇಲೆ ದಾಳಿ ನಡೆದಿದೆ.
ಬಿಜೆಪಿ ನಾಯಕರ ಜತೆ ನಂಟು ಹೊಂದಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಉದಯ್‌ಗೌಡ ವಿರುದ್ಧ ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ದಾಖಲಾಗಿದ್ದ ಹಳೆಯ ಪ್ರಕರಣಕ್ಕೆ ಮರುಜೀವ ಬಂದಿದ್ದು, ಮಂಗಳವಾರ ಮಲ್ಲೇಶ್ವರಂನಲ್ಲಿರುವ ಅವರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. 
ಮಲ್ಲೇಶ್ವರಂನಲ್ಲಿರುವ ಉದಯ್‌ಗೌಡ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ಮಾಹಿತಿ ಅರಿತಿದ್ದ ಉದಯ್‌ ಗೌಡ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ. 
ಇದೇ ವೇಳೆ ಪ್ರಕರಣದ 2ನೇ ಆರೋಪಿಯಾಗಿರುವ ಕೆ.ವಿ ನಾಯ್ಡು ಅವರ ಡಾಲರ್ಸ್‌ ಕಾಲೋನಿಯಲ್ಲಿರುವ ನಿವಾಸದಲ್ಲೂ ಶೋಧ ಕಾರ್ಯಾಚರಣೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನಕ್ಕೆ ಕ್ರಮ ವಹಿಸಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 
ನೀಲಗಿರಿಸ್‌ ಪ್ರಾಪರ್ಟಿಸ್‌ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಉದಯ್‌ಗೌಡ ಹಾಗೂ ಇನ್ನಿತರೆ ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ಕಬಳಿಸಲು ಯತ್ನಿಸಿದ್ದರು. ಅಲ್ಲದೆ ಈ ವಿಚಾರ ಬಗೆಹರಿಸಿಕೊಡಲು 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಅಯಾಜ್‌ ಎಂಬುವವರು 2017 ರಲ್ಲಿ ದೂರು ನೀಡಿದ್ದರು. 
ಸಮ್ಮಿಶ್ರ ಸರ್ಕಾರ ಉರುಳಿಸಲು "ಕಿಂಗ್‌ಪಿನ್‌'ಗಳ ಮೂಲಕ ಪ್ರಯತ್ನಗಳು ನಡೆಯುತ್ತಿವೆ ಎಂದು ಕೆಲ ದಿನಗಳ ಹಿಂದೆ ಸಿಎಂ ಎಚ್‌.ಡಿ ಕುಮಾರಸ್ವಾಮಿ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿತ್ತು.
SCROLL FOR NEXT