ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ನಡೆಯಲಿರುವ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಮುಕ್ತ ಮತ್ತು ಶಾಂತಿಯುತ ಮತದಾನಕ್ಕಾಗಿ 50 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ಪಂತ್ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಕೈಗೊಂಡಿರುವ ಭದ್ರತಾ ಏರ್ಪಾಡುಗಳ ಕುರಿತು ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ರಾಜ್ಯ ಮೀಸಲುಪಡೆ, ಜಿಲ್ಲಾ ಸಶಸ್ತ್ರದಳ, ಗೃಹರಕ್ಷಕ ದಳ, ಅರಣ್ಯ ರಕ್ಷಕರನ್ನು ಅಗತ್ಯಕ್ಕೆ ತಕ್ಕಂತೆ ಭದ್ರತೆಗೆ ನಿಯೋಜಿಸಲಾಗಿದೆ. ಇದರಲ್ಲಿ 34,548 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.
ಒಟ್ಟು 14 ಲೋಕಸಭಾ 28,022 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಸೂಕ್ಷ್ಮ, ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.
ಮಂಗಳವಾರ ಮತದಾನ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರವರೆಗೂ ನಡೆಯಲಿದೆ. ಮೊದಲ ಹಂತದಲ್ಲಿ ಇದೇ 18 ರಂದು 14 ಕ್ಷೇತ್ರಗಳಿಗೆ ಸುಗಮವಾಗಿ ಮತದಾನ ನಡೆದಿತ್ತು. ಇದೇ ಮಾದರಿಯಲ್ಲಿ ಚುನಾವಣೆಗೆ ವ್ಯಾಪಕ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಕಮಲ್ ಪಂಥ್ ತಿಳಿಸಿದರು.
ನಾಳಿನ ಮತದಾನದ ನಂತರ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಪ್ರಕ್ರಿಯೆಗಳು ಸಂಪೂರ್ಣಗೊಳ್ಳಲಿದ್ದು, ಮತ ಎಣಿಕೆಯಷ್ಟೇ ಬಾಕಿ ಉಳಿಯಲಿದೆ. ಲೋಕಸಭೆಯ ಕಾಂಗ್ರೆಸ್ನ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ಅನಂತ್ ಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ, ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ದಿ. ಎಸ್ ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರಖಂಡ್ರೆ, ಕಾಂಗ್ರೆಸ್ನ ಹಿರಿಯ ನಾಯಕ ವಿ.ಎಸ್. ಉಗ್ರಪ್ಪ, ಬಿಜೆಪಿ ನಾಯಕ ಪ್ರಹ್ಲಾದ್ ಜೋಷಿ ಸೇರಿ ಚುನಾವಣಾ ಅಖಾಡದಲ್ಲಿರುವ ಪ್ರಮುಖ ಉಮೇದುವಾರರಾಗಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos