ಬೆಂಗಳೂರು: ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ತಮ್ಮ ಮಕ್ಕಳ ಶುಲ್ಕ ಪಾವತಿ ವಿಚಾರದಲ್ಲಿ ಅನನುಕೂಲತೆಯನ್ನು ತಡೆಯಲು ಶುಲ್ಕ ಪಾವತಿ ವಿಧಾನ ಪ್ರಕ್ರಿಯೆಯನ್ನು ಸರಳಗೊಳಿಸಿ ಕೇಂದ್ರಿತ ಅಥವಾ ಆನ್ ಲೈನ್ ಶುಲ್ಕ ಪಾವತಿ ವಿಧಾನವನ್ನು ಜಾರಿಗೆ ತರುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.
ಶುಲ್ಕ ಪಾವತಿ ವಿಚಾರದಲ್ಲಿ ಕರಡು ನೀತಿ ರಚಿಸುವಂತೆ ಸರ್ಕಾರಕ್ಕೆ ಕೋರ್ಟ್ ಸಲಹೆ ನೀಡಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್ ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ ಆರ್ ಉಮಾಶಂಕರ್ ಗೆ ಸಲಹೆ ನೀಡಿದೆ.
ಅಡ್ವೊಕೇಟ್ ಎನ್ ಪಿ ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಿದ ಹೈಕೋರ್ಟ್ 2015ರ ಏಪ್ರಿಲ್ 13ರಂದು ಹೊರಡಿಸಿದ್ದ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತು. ಅಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಖಾಸಗಿ ಮತ್ತು ಅನುದಾನಿತ ಶಾಲೆಗಳು ಶುಲ್ಕ, ಸಿಬ್ಬಂದಿ, ಮೂಲಭೂತ ಸೌಕರ್ಯ ಮೊದಲಾದ ವಿವರಗಳನ್ನು ಕಡ್ಡಾಯವಾಗಿ ಶಾಲೆಯ ಮುಂದೆ ಪ್ರದರ್ಶಿಸುವಂತೆ ಸೂಚಿಸಿತ್ತು. ಆದರೆ ಸರ್ಕಾರ ಅದನ್ನು ಇನ್ನೂ ಜಾರಿಗೆ ತಂದಿಲ್ಲ.