ಬೆಂಗಳೂರು: ರಾಜ್ಯದಲ್ಲಿನ 30 ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ರೆಡ್ ಆಲರ್ಟ್ ಘೋಷಿಸಿದೆ.
ನೈರುತ್ಯ ಮುಂಗಾರು ಆರಂಭವಾದ ಮೊದಲ ವಾರದಲ್ಲಿ ಅಷ್ಟೇನೂ ಮಳೆ ಬಿದ್ದಿರಲಿಲ್ಲ.ಆದರೆ, ಕಳೆದ ಎರಡು ತಿಂಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.
ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತಿತರ ಜಿಲ್ಲೆಗಳಲ್ಲಿ 204. 04 ಮಿಲಿ ಮೀಟರ್ ಮಳೆಯಾಗುತ್ತಿದ್ದು, ರೆಡ್ ಆಲರ್ಟ್ ಘೋಷಿಸಲಾಗಿದೆ.ಹಾಸನದಲ್ಲಿ 115 ಮಿಮಿಯಿಂದ 204. ಮಿಮೀವರೆಗೂ ಮಳೆಯಾಗಿದ್ದು, ಆರೆಂಜ್ ಆಲರ್ಟ್ ಪ್ರಕಟಿಸಲಾಗಿದೆ. ಮೈಸೂರು, ಚಾಮರಾಜನಗರ, ಹಾವೇರಿ ಮತ್ತಿತರ ಜಿಲ್ಲೆಗಳಲ್ಲಿ 64. 5 ಮಿಲೀ ಮೀಟರ್ ನಿಂದ 115. 5 ಮಿಲಿ ಮೀಟರ್ ವರೆಗೂ ಮಳೆಯಾಗಿದೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ, ಧಾರಾಕಾರ ಮಳೆಯಿಂದಾಗಿ ಜಲಾಶಗಳಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣ ಹೆಚ್ಚಳದಿಂದಾಗಿ ಉತ್ತರ ಕರ್ನಾಟಕದ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ವಿಜಯಪುರ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಾಗಿ ಪ್ರವಾಹ ಉಂಟಾಗಿದೆ ಎಂದು ತಿಳಿಸಿದರು.
ಘಟ್ಟಪ್ರಭಾ ಮತ್ತು ಮಲ್ಲಪ್ರಭಾ ಜಲಾಶಯಗಳಿಂದ 1 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಗೆ ಹರಿಯಬಿಡಲಾಗಿದೆ. ಇದರಿಂದಾಗಿ ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ಪ್ರವಾಹ ಉಂಟಾಗಿದೆ. ಈ ಪ್ರದೇಶಗಳಲ್ಲಿ ರೆಡ್ ಆಲರ್ಟ್ ಘೋಷಿಸಲಾಗಿದೆ ಎಂದು ಹೇಳಿದರು.
ಕಳೆದ ವರ್ಷ ತೀವ್ರ ಬರಗಾಲ ಎದುರಿಸಿದ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. 2009ರ ನಂತರ ಈ ಜಿಲ್ಲೆಗಳಲ್ಲಿ ಈ ಬಾರಿ ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಕುಡಿಯುವ ನೀರು, ರಸ್ತೆ ಸಂಪರ್ಕ, ಪರಿಹಾರ ಕೇಂದ್ರಗಳ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos