ರಾಜ್ಯ

ಜಿಎಸ್ ಟಿ ಪರಿಹಾರ: ರಾಜ್ಯಕ್ಕೆ ಬಾಕಿ ಉಳಿಕೆ ನೀಡುವ ಭರವಸೆ ನೀಡಿದ ಪ್ರಧಾನಿ ಮೋದಿ 

Sumana Upadhyaya

ಬೆಂಗಳೂರು:ವಿಧಾನಸಭೆಯ ಉಪ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಗಳಿಸಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. 


ಬಾಕಿ ಉಳಿದಿರುವ ಸರಕು ಮತ್ತು ಸೇವಾ ತೆರಿಗೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡುವುದಾಗಿ ಸಹ ಸಿಎಂಗೆ ಪ್ರಧಾನಿ ಭರವಸೆ ನೀಡಿದ್ದಾರೆ.


ಉಭಯ ನಾಯಕರು ನಿನ್ನೆ ದೂರವಾಣಿಯಲ್ಲಿ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದರು. ಜಿಎಸ್ ಟಿ, ಪೌರತ್ವ ಕಾನೂನು ಹಾಗೂ ರಾಜಕೀಯ ವಿದ್ಯಮಾನಗಳು ಚರ್ಚೆಗೆ ಬಂದವು. ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾನೂನು ಸೇರಿದಂತೆ ಎಲ್ಲಾ ಯೋಜನೆಗಳನ್ನು ಜಾರಿಗೆ ತರುವುದಾಗಿ ಸಿಎಂ ಯಡಿಯೂರಪ್ಪ ಪ್ರಧಾನಿಯವರಿಗೆ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.


ಸಚಿವ ಸಂಪುಟ ವಿಸ್ತರಣೆಗೆ ದೆಹಲಿಗೆ ಹೋಗಲು ಸಿದ್ದತೆ ಮಾಡಿಕೊಂಡಿದ್ದ ಯಡಿಯೂರಪ್ಪನವರಿಗೆ ಪ್ರಧಾನಮಂತ್ರಿಯವರ ಕರೆ ಅಚ್ಚರಿ ತಂದಿದೆ. ರಾಜ್ಯದಲ್ಲಿ ಜಿಎಸ್ ಟಿ ಸಂಗ್ರಹಣೆ ಬಗ್ಗೆ ಪ್ರಧಾನಿ ವಿಚಾರಿಸಿದರು. ಕರ್ನಾಟಕದ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.


ಜಿಎಸ್ ಟಿ ಪರಿಹಾರ ಮೊತ್ತವಾದ 5 ಸಾವಿರದ 600 ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಕೇಂದ್ರದ ಮೇಲೆ ಒತ್ತಡ ಹಾಕಬೇಕೆಂದು ಸಹ ಕಾಂಗ್ರೆಸ್ ಆಗ್ರಹ ಮಾಡಿತ್ತು.

SCROLL FOR NEXT