ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ ಬಳಿಕ ನಡೆದ ಗೋಲಿಬಾರ್ಗೆ ಬಲಿಯಾದ ಕುದ್ರೋಳಿಯ ಯುವಕ ನೌಶೀನ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಜಮೀರ್ ಅಹ್ಮದ್ ಖಾನ್ ಅವರು ಸೋಮವಾರ ಭೇಟಿ ನೀಡಿದರು.
ಈ ಸಂದರ್ಭ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಐದು ಲಕ್ಷ ರೂ.ನ ಚೆಕ್ ವಿತರಿಸಿದರು. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದಲೂ 2.5 ಲಕ್ಷ ರೂ.ನ ಚೆಕ್ ಅನ್ನು ಸಂತ್ರಸ್ತ ಕುಟುಂಬಕ್ಕೆ ನೀಡಲಾಯಿತು.
ಈ ಸಂದರ್ಭ ಮಾಜಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಶಾಸಕರಾದ ಐವನ್ ಡಿಸೋಜ, ಹರೀಶ್ ಕುಮಾರ್, ಕಾರ್ಪೊರೇಟರ್ಗಳಾದ ಪ್ರವೀಣ್ಚಂದ್ರ ಆಳ್ವ, ವಿನಯರಾಜ್, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಜಿ.ಎ.ಬಾವ, ಲತೀಫ್ ಕಂದಕ್, ಡಿ.ಎಂ.ಅಸ್ಲಂ ಮತ್ತಿತರರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮಂಗಳೂರು ಗೋಲಿಬಾರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದು ಸರಿಯಲ್ಲ. ಇದು ಹೈಕೋರ್ಟ್ ನ್ಯಾಯಾಧೀಶರಿಂದಲೇ ತನಿಖೆಯಾಗಲಿ ಒತ್ತಾಯಿಸಿದರು.
ಗೋಲಿಬಾರ್ ಮಾಡಿದ್ದು ಪೊಲೀಸರು, ಸಿಐಡಿಯಲ್ಲಿ ಇರುವವರು ಕೂಡ ರಾಜ್ಯ ಪೊಲೀಸರೇ ಆಗಿದ್ದಾರೆ. ಆದ್ದರಿಂದ ಪೊಲೀಸರ ಪ್ರಕರಣವನ್ನು ಪೊಲೀಸರಿಂದಲೇ ತನಿಖೆ ಮಾಡಿಸುವುದು ಸರಿಯಲ್ಲ. ಈ ಘಟನೆ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಈ ಬಗ್ಗೆ ಅಧಿವೇಶನದಲ್ಲೂ, ಹೊರಗೂ ಒತ್ತಾಯ ಮಾಡಲಾಗುವುದು ಎಂದು ತಿಳಿಸಿದರು.
ದಕ್ಷಿಣ ಕನ್ನಡ, ಉಡುಪಿಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರೇ ಸಿಎಂ. ಅವರ ರಿಮೋಟ್ ಕಂಟ್ರೋಲ್ ನಲ್ಲಿ ರಾಜ್ಯದ ಮುಖ್ಯಮಂತ್ರಿ ಇದ್ದಾರೆ. ಅವರು ಹೇಳಿದಂತೆ ಯಡಿಯೂರಪ್ಪ ನಡೆದುಕೊಳ್ಳುತ್ತಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡುವ ಭಟ್ ವಿರುದ್ಧ ಮೊದಲು ಪ್ರಕರಣ ದಾಖಲಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆ ಮಾಡುವವರು ಪಂಕ್ಚರ್ ಹಾಕುವವರು, ಅಕ್ಷರ ಗೊತ್ತಿಲ್ಲದವರು ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಕುರಿತಂತೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಡವರು, ದಲಿತರ ಬಗ್ಗೆ ತೇಜಸ್ವಿಗೆ ಯಾವುದೇ ಕಾಳಜಿ ಇಲ್ಲ. ಅವರು ಆರೆಸ್ಸೆಸ್ನವರು, ಎಬಿವಿಪಿಯಿಂದ ಬಂದವರು. ಬಡತನ ಕೂಲಿ ಮಾಡುವವರ ಬಗ್ಗೆ ಅವರಿಗೆ ಗೊತ್ತಿಲ್ಲ. ಇಂತಹವರಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.