ರಾಜ್ಯ

ಬೆಂಗಳೂರು: ಅಂಗವೈಕಲ್ಯ ಮೆಟ್ಟಿ ನಿಂತು, ಕೆಎಎಸ್ ಪರೀಕ್ಷೆ ಪಾಸ್ ಮಾಡಿದ ಯುವತಿ

Shilpa D

ಬೆಂಗಳೂರು: ಹುಟ್ಟಿದಾಗಿನಿಂದಲೇ ಟೀಕೆ, ಅವಹೇಳನಗಳನ್ನು ಸಹಿಸುತ್ತಾ ಬೆಳೆದ ಯುವತಿ ಇಂದು ಬಹು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಆಕೆಯ ತಂದೆ ವಿದ್ಯಾಭ್ಯಾಸ  ನಿಲ್ಲಿಸುವಂತೆ ಹೇಳಿದರೂ ಕೇಳದ ಯುವತಿ, ತಂದೆಯ ಮಾತು ಕೇಳದೆ ವ್ಯಾಸಂಗ ಮಾಡಿದ್ದಾರೆ. 

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಗ್ರಾಮೀಣ ಭಾಗದ ಒಂದು ಪುಟ್ಟ ಗ್ರಾಮ ನಾಗನಾಯಕನಹಳ್ಳಿಯಲ್ಲಿ ಜನಸಿದ ಗೌರಮ್ಮ ಈ  ಸಾಧನೆ ಮಾಡಿದ್ದಾರೆ. ಪದವಿ ಮುಗಿಸಿ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಾ ಓದುವ ಛಲವನ್ನು ಬಿಡದೆ ಸಾಧನೆ ಮಾಡಿದ್ದಾರೆ. 

ರೈತ ಕುಟುಂಬದಲ್ಲಿ ಬೆಳೆದಿದ್ದ ಗೌರಮ್ಮ ಅವರು ಈಗ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಇಡೀ ಕುಟುಂಬಕ್ಕೂ ಹಾಗೂ ತಾಲೂಕಿಗೆ ಹೆಮ್ಮೆ ತರುವಂತಹ ಸಾಧನೆ ಮಾಡಿ ತೋರಿಸಿದ್ದಾರೆ. 

ಹುಟ್ಟುತ್ತಲೇ ಅಂಗವೈಕಲ್ಯದಿಂದ ಹುಟ್ಟಿದ್ದ ಗೌರಮ್ಮ ಕುಟುಂಬದ ಸಹಕಾರದಿಂದ ಸರ್ಕಾರಿ ಶಾಲೆ ಹಾಗೂ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದರು.

ಬಿಟಿಎಲ್ ಕಾಲೇಜಿನಲ್ಲಿ ಪದವಿ ಮುಗಿಸಿದ ಬಳಿಕ ತಾವು ಓದಿದ್ದ ಆನೇಕಲ್ ತಾಲೂಕಿನ ಇಗ್ಗಲೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿಯೇ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗಲೇ ಐಎಎಸ್ ಹಾಗೂ ಕೆಎಎಸ್ ಪರೀಕ್ಷೆ ಬರೆದು ಸಾಧನೆ ಮಾಡಬೇಕೆಂದು ಗೌರಮ್ಮ ಅವರು ಛಲ ಹೊಂದಿದ್ದರು. 

ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಲೇ ಕೆಎಎಸ್ ಪರೀಕ್ಷೆಗೆ ತಯಾರಿ ಮಾಡಿಕೊಂಡು, ಪರೀಕ್ಷೆ ಎದುರಿಸಿದ ಗೌರಮ್ಮ ಅವರು ಮೊದಲನೇ ಹಂತದಲ್ಲಿಯೇ ತಹಶೀಲ್ದಾರ್ ಗ್ರೇಡ್ ಪರೀಕ್ಷೆ ಬರೆದು 1,500 ಅಂಕಗಳಿಗೆ 884 ಅಂಕ ಪಡೆಯುವ ಮೂಲಕ ಉತ್ತೀರ್ಣರಾಗಿದ್ದಾರೆ. ತಮ್ಮ ಸಾಧನೆಯಿಂದ ಕುಟುಂಬಕ್ಕೆ ಹಾಗೂ ತಾಲೂಕಿಗೆ ಹೆಮ್ಮೆ ತಂದು ಕೊಟ್ಟಿದ್ದಾರೆ.

ಗೌರಮ್ಮ ಪೋಷಕರಿಗೆ ಏಳು ಜನ ಮಕ್ಕಳಿದ್ದು, ಗೌರಮ್ಮ ಕೊನೆಯ ಮಗಳು. ಕಷ್ಟದ ಸಂದರ್ಭದಲ್ಲಿಯೂ ಎಲ್ಲಾ ಮಕ್ಕಳನ್ನು ಹೆತ್ತವರು ಒಂಬತ್ತನೇ ಹಾಗೂ ಹತ್ತನೇ ತರಗತಿ ಓದಿಸಿದ್ದು, ಕೊನೆಯ ಮಗಳಾದ ಗೌರಮ್ಮ ಚೆನ್ನಾಗಿ ಓದಬೇಕು, ಉನ್ನತ ಸ್ಥಾನಕ್ಕೆ ಹೋಗಬೇಕೆನ್ನುವುದು ಅವರ ತಂದೆಯ ಕನಸಾಗಿತ್ತು. 

ಗೌರಮ್ಮ ಅವರಿಗೆ ಯುಪಿಎಸ್ ಸಿ ಪರೀಕ್ಷೆ ಬರೆಯುವ ಆಸೆಯಿತ್ತು, ಆದರೆ ಅವರ ಅರ್ಜಿ ತಿರಸ್ಕೃತವಾದ ಕಾರಣ ಕೆಪಿಎಸ್ ಸಿ ಗೆ ಸಿದ್ಧರಾದರು. ಖಾಸಗಿ ಕಂಪನಿಯ ಉದ್ಯೋಗಿಯನ್ನು ವಿವಾಹವಾಗಿರುವ ಗೌರಮ್ಮ ಯಾವಿುದೇ ಕೋಚಿಂಗ್ ಕ್ಲಾಸ್ ಗೆ ತೆರಳದೆ ಈ ಸಾಧನೆ ಮಾಡಿದ್ದಾರೆ, 

ಯಾವುದೇ ಪರಿಸ್ಥಿತಿಯಲ್ಲಿಯೂ ಕುಗ್ಗದೇ ನಿಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ಮುಂದುವರಿಯಿರಿ, ದೊಡ್ಡ ಕನಸನ್ನು ಕಂಡು ಅದನ್ನು ಈಡೇರಿಸುವಲ್ಲಿ ಮುನ್ನುಗ್ಗಿ ಎದು ಸಲಹೆ ನೀಡಿದ್ದಾರೆ,

SCROLL FOR NEXT