ಬೆಳ್ಳಂದೂರು ಕೆರೆಯ ಸುತ್ತ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿರುವ ಅಗ್ನಿಶಾಮಕ ಸಿಬ್ಬಂದಿ
ಬೆಂಗಳೂರು: ನಗರದ ಬೆಳ್ಳಂದೂರು, ಅಗರ ಮತ್ತು ವರ್ತೂರು ಕೆರೆ ಸ್ವಚ್ಛತೆಯಲ್ಲಿ ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಸರ್ಕಾರ ಮತ್ತು ಸ್ಥಳೀಯ ನಗರ ಸಂಸ್ಥೆಗಳಿಗೆ ರಾಷ್ಟ್ರೀಯ ಹಸಿರು ಪ್ರಾಧಿಕಾರ ಛೀಮಾರಿ ಹಾಕಿದ ಬೆನ್ನಲ್ಲೇ ಮಾಜಿ ಅಭಿಯೋಜಕರಿಗೆ ಸರ್ಕಾರ 500 ಕೋಟಿ ರೂಪಾಯಿ ದಂಡ ವಿಧಿಸಿದೆ.
ಬೆಳ್ಳಂದೂರು ಕೆರೆ ಬೆಂಕಿ ಪ್ರಕರಣದಲ್ಲಿ 500 ಕೋಟಿ ರೂಪಾಯಿ ದಂಡ ಎದುರಿಸಿದ ಬಿಬಿಎಂಪಿ, ಬಿಡಿಎ ಮತ್ತು ಬಿಡಬ್ಲ್ಯುಎಸ್ಎಸ್ ಬಿ ರಾಷ್ಟ್ರೀಯ ಹಸಿರು ಪ್ರಾಧಿಕಾರಕ್ಕೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದು ಅದು ಇತ್ತೀಚೆಗೆ ತಿರಸ್ಕರಿಸಲ್ಪಟ್ಟಿತ್ತು.
ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯೆ ನೀಡಿದ ರಾಜ್ಯ ಮುಖ್ಯಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್, ರಾಷ್ಟ್ರೀಯ ಹಸಿರು ಪ್ರಾಧಿಕಾರ ಸ್ಥಾಪಿಸಿದ್ದ ಆಯೋಗ ವರದಿಯನ್ನು ಸಲ್ಲಿಸಿತ್ತು. ಅದರ ಆಧಾರದ ಮೇಲೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ನೇತೃತ್ವದ ತಂಡ ಕೆರೆಗಳ ಸಂರಕ್ಷಣೆಗೆ ತೆಗೆದುಕೊಂಡಿರುವ ಕ್ರಮಗಳ ಕುರಿತು ವರದಿಯನ್ನು ತಯಾರಿಸಿತ್ತು. ಅದನ್ನು ನಮ್ಮ ವಕೀಲರಾಗಿದ್ದ ದೆಹಲಿಯಲ್ಲಿರುವ ಅಶೋಕ್ ದೇವರಾಜ್ ಅವರಿಗೆ ಕಳುಹಿಸಲಾಗಿತ್ತು. ಅದಕ್ಕೆ ಆಕ್ಷೇಪವೆತ್ತದೆ ಅವರು ಅದನ್ನು ತಮ್ಮ ಬಳಿಯೇ ಇಟ್ಟುಕೊಂಡರು.
ಆಕ್ಷೇಪ ಸಲ್ಲಿಸದಿದ್ದಾಗ ಆಯೋಗ ಸಲ್ಲಿಸಿದ ವರದಿಯನ್ನೇ ಸ್ವೀಕರಿಸುವುದಾಗಿ ರಾಷ್ಟ್ರೀಯ ಹಸಿರು ಪ್ರಾಧಿಕಾರ ಹೇಳಿ 500 ಕೋಟಿ ರೂಪಾಯಿ ದಂಡ ವಿಧಿಸಿದೆ. ವಕೀಲರಿಂದಾಗಿ ಸರ್ಕಾರಕ್ಕೆ ದಂಡ ಬಿದ್ದಿದೆ. ಇನ್ನು ಮುಂದೆ ಅವರಿಗೆ ಸರ್ಕಾರದ ಯಾವುದೇ ಕೇಸುಗಳನ್ನು ನೀಡುವುದಿಲ್ಲ, ಅವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಹೇಳಿದರು.
ಕಳೆದ ವರ್ಷ ಮೇ 11ರಂದು ರಾಷ್ಟ್ರೀಯ ಹಸಿರು ಪ್ರಾಧಿಕಾರ, ನಗರದ ಬೆಳ್ಳಂದೂರು, ಅಗರ ಮತ್ತು ವರ್ತೂರು ಕೆರೆಗಳ ಸ್ಥಿತಿಗತಿ ಬಗ್ಗೆ ಮತ್ತು ಅಲ್ಲಿ ಉಂಟಾಗಿರುವ ಹಾನಿ ಬಗ್ಗೆ ವರದಿ ಸಲ್ಲಿಸುವಂತೆ ಹಲವು ಉನ್ನತ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ಸ್ವತಂತ್ರ ಆಯೋಗವನ್ನು ರಚಿಸುವಂತೆ ಆದೇಶಿಸಿತ್ತು. ಆಯೋಗದಲ್ಲಿ ಹಲವು ವಕೀಲರು, ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ನ ಪ್ರೊಫೆಸರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕೆರೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos