ರಾಜ್ಯ

ಸೈನಿಕರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಾಶ್ಮೀರ ಯುವಕನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

Nagaraja AB

ಬೆಂಗಳೂರು: ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಭಾರತೀಯ ಸೇನೆಯ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಾಕಾರಿ ರೀತಿಯಲ್ಲಿ ಹೇಳಿಕೆ ನೀಡಿದ್ದ  ಕಾಶ್ಮೀರದ ಯುವಕ ಆಬಿದ್  ಮಲ್ಲಿಕ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿನ ಸೈಬರ್ ಅಪರಾಧ ಘಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಮಲ್ಲಿಕ್ ವಿರುದ್ಧ ದೇಶ ದ್ರೋಹ ಸೇರಿದಂತೆ ಮತ್ತಿತರ ಕಾನೂನಿನಡಿಯಲ್ಲಿ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವ್ಯಾಸಂಗ ಹಾಗೂ ಕೆಲಸಕ್ಕಾಗಿ ಜಮ್ಮು- ಕಾಶ್ಮೀರದಿಂದ ಬೆಂಗಳೂರಿಗೆ ಬಂದಿರುವ ಆಬಿದ್ ಮಲಿಕ್ ಫೇಸ್ ಬುಕ್ ಪೋಸ್ಟ್ ನಲ್ಲಿ ಭಾರತೀಯ ಸೇನೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದರಲ್ಲದೇ, ಸಾವಿನಲ್ಲಿ ಸಂಭ್ರಮಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಈ ಸಂಬಂಧ ಗಿರೀಶ್ ಭಾರಾದ್ವಾಜ್ ಎಂಬುವರು ನೀಡಿದ ದೂರಿನ ಅನ್ವಯ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ. ದೊಮ್ಮಲೂರಿನ ಖಾಸಗಿ ಕಂಪನಿಯೊಂದರಲ್ಲಿ  ಕೆಲಸ ಮಾಡುತ್ತಿರುವ ಆಬಿದ್ ಮಲ್ಲಿಕ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಟ್ವಿಟರ್, ಇಮೇಲ್ ಮೂಲಕ  ಒತ್ತಡ ಬರುತಿದ್ದು, ಇಂದು ಬೆಳಗ್ಗೆ 150 ಕರೆಗಳನ್ನು ಸ್ವೀಕರಿಸಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಆಬಿದ್ ಮಲಿಕ್ ವಿರುದ್ಧ ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಾನ, ಭಾಷೆ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವಿನ ದ್ವೇಷದ ದ್ವೇಷ ಅಥವಾ ಭಾವನೆ ಬಿತ್ತುವ ಅಪರಾಧಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ 153 ಹಾಗೂ  ಸೆಕ್ಷನ್ 124 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT